-
ಹಂಪಿ ಬಳಿಯ ಕಮಲಾಪುರದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ
-
ಕಮಲಾಪುರ ಬಳಿಯ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದ ಎದುರು ತ್ರಿ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಶೀಘ್ರವೇ ಚಾಲನೆ ಎಂದ ಸಚಿವ

ಹೊಸಪೇಟೆ (ವಿಜಯನಗರ): ಹನುಮನ ಜನ್ಮಸ್ಥಳ ಅಂಜನಾದ್ರಿಯೇ ಎಂದು ರಾಮಾಯಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದರು.
ಹಂಪಿ ಸಮೀಪದ ಕಮಲಾಪುರದಲ್ಲಿನ ಮಯೂರು ಭುವನೇಶ್ವರಿ ಹೋಟೆಲ್ನಲ್ಲಿ ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದರು.
ಹನುಮನ ಜನ್ಮಸ್ಥಳ ಅಂಜನಾದ್ರಿಯೇ ಎನ್ನುವುದು ಇತಿಹಾಸದಲ್ಲಿ ಅನೇಕ ಪುರಾವೆಗಳಿದ್ದು, ಐತಿಹಾಸಿಕ ಸ್ಥಳಗಳ ಬಗ್ಗೆ ಆಕ್ಷೇಪಣೆಗಳು ಬರುವುದು ಸಹಜ. ಏನೇ ಆಕ್ಷೇಪಣೆಗಳಿದ್ದರೂ ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ ಎಂದು ತಿಳಿಸಿದರು.
ತ್ರಿ ಸ್ಟಾರ್ ಹೋಟೆಲ್ ನಿರ್ಮಾಣ ಶೀಘ್ರ
ಹಂಪಿಯಲ್ಲಿ ತ್ರಿ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಪುರಾತತ್ವ ಇಲಾಖೆಯಿಂದ ಅಡೆತಡೆಯಾಗಲಿದೆ. ಆದ್ದರಿಂದ ಕಮಲಾಪುರ ಬಳಿಯ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದ ಎದರು 20 ಕೋಟಿ ರೂ.ವೆಚ್ಚದಲ್ಲಿ ತ್ರಿ ಸ್ಟಾರ್ ಹೋಟೆಲ್ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಹೋಟೆಲ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶೀಘ್ರವೇ ಶಿಲಾನ್ಯಾಸ ಮಾಡಲಾಗುವುದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಇದಲ್ಲದೆ, ಹಂಪಿಯಲ್ಲಿ ಸಾವಿರ ಮಕ್ಕಳು ಉಳಿದುಕೊಳ್ಳಲು ವಸತಿ ವ್ಯವಸ್ಥೆ ಒದಗಿಸಲು ಈಗಾಗಲೇ ತೀರ್ಮಾನ ಮಾಡಲಾಗಿದೆ. ಕಡಿಮೆ ದರದಲ್ಲಿ ಮಕ್ಕಳಿಗೆ ಈ ಸೌಲಭ್ಯ ಒದಗಿಸುವುದರಿಂದ ವಿಜಯನಗರ ಸಾಮ್ರಾಜ್ಯದ ಭವ್ಯ ಇತಿಹಾಸದ ಬಗ್ಗೆ ತಿಳಿಯಲು ಸಾಧ್ಯವಾಗುತ್ತದೆ ಎಂದರಲ್ಲದೆ, ಅರಣ್ಯ ಪ್ರದೇಶವನ್ನು ನಾಶ ಮಾಡದೇ, ಇರುವ 250 ಎಕರೆ ಜಾಗದಲ್ಲಿ ಥೀಮ್ ಪಾರ್ಕ್ ಹಾಗೂ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ತಿಳಿಸಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು ಇದ್ದರು.