BREAKING NEWS : ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ

ಸುದ್ದಿಒನ್,ನವದೆಹಲಿ,ಜೂನ್.02: ತಮಿಳುನಾಡಿನ ಬಿಜೆಪಿಯ ಅತ್ಯಂತ ಪ್ರಭಾವಿ ಹಾಗೂ ಫೈರ್‌ಬ್ರಾಂಡ್ ನಾಯಕ ಎಂದೇ ಹೆಸರಾಗಿದ್ದ ಕೆ. ಅಣ್ಣಾಮಲೈ ಅವರು ಪಕ್ಷಕ್ಕೆ ಗುಡ್‌ ಬೈ ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಹೊಸ ಹಾದಿ ಹಿಡಿಯಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಅದಕ್ಕೀಗ ಅಧಿಕೃತ ಮುದ್ರೆ ಬಿದ್ದಂತಾಗಿದೆ. ದೆಹಲಿಗೆ ಭೇಟಿ ನೀಡಿರುವ ಅಣ್ಣಾಮಲೈ, ಬಿಜೆಪಿ ರಾಷ್ಟ್ರೀಯ ನಾಯಕರಾದ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಖಾಕಿ ಕಳಚಿ ರಾಜಕೀಯಕ್ಕೆ ಬಂದಾಗಿನಿಂದಲೂ ತಮಿಳುನಾಡಿನಲ್ಲಿ ಬಿಜೆಪಿಯ ಪ್ರಮುಖ ಮುಖವಾಗಿದ್ದರು. ಅವರ ಈ ದಿಢೀರ್ ನಿರ್ಧಾರಕ್ಕೆ ನಿಖರ ಕಾರಣವೇನು ಎಂಬುದು ಇನ್ನು ನಿಗೂಢವಾಗಿದ್ದರೂ, ರಾಜಕೀಯ ಪಡಸಾಲೆಯಲ್ಲಿ ಹಲವು ಚರ್ಚೆಗಳು ಶುರುವಾಗಿವೆ.

ತಮಿಳುನಾಡಿನಲ್ಲಿ ಕಮಲ ಅರಳಿಸಲೇಬೇಕು ಎಂದು ಅಣ್ಣಾಮಲೈ ಅವರು ‘ಎನ್ ಮಣ್ಣ್, ಎನ್ ಮಕ್ಕಳ್’ (ನನ್ನ ಮಣ್ಣು, ನನ್ನ ಜನ) ಎಂಬ ಬೃಹತ್ ಪಾದಯಾತ್ರೆ ನಡೆಸಿ ಅಬ್ಬರದ ಪ್ರಚಾರ ಮಾಡಿದ್ದರು. ಆದರೆ, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲ. ಈ ಸೋಲಿನ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಅಣ್ಣಾಮಲೈ ಅವರ ಆಕ್ರಮಣಕಾರಿ ಮತ್ತು ನೇರ ನಡೆ ನುಡಿಯ ರಾಜಕಾರಣ ಪಕ್ಷದ ಒಳಗಿನ ಕೆಲವು ಹಿರಿಯ ನಾಯಕರಿಗೆ ಇಷ್ಟವಿರಲಿಲ್ಲ. ಮೈತ್ರಿ ವಿಚಾರ ಹಾಗೂ ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳೇ ಅವರು ಈ ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣ ಎಂಬ ಮಾತುಗಳೂ ಕೇಳಿಬರುತ್ತಿವೆ.
ಸದ್ಯಕ್ಕಂತೂ ಅಣ್ಣಾಮಲೈ ತಮ್ಮ ಮುಂದಿನ ಯೋಜನೆಯನ್ನು ಬಹಿರಂಗಪಡಿಸಿಲ್ಲ. ಆದರೆ, ಅವರು ಹೊಸ ರಾಜಕೀಯ ಪಕ್ಷ ಕಟ್ಟಲಿದ್ದಾರೆ ಎಂಬ ವದಂತಿಗಳು ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವುದಂತೂ ಸುಳ್ಳಲ್ಲ. ಮಾಜಿ ಸಿಂಗಂನ ಈ ನಡೆ ದ್ರಾವಿಡ ನಾಡಿನ ರಾಜಕಾರಣವನ್ನು ಯಾವ ತಿರುವಿಗೆ ಕರೆದೊಯ್ಯಲಿದೆ ಎಂಬುದನ್ನು ಕಾದುನೋಡಬೇಕಿದೆ.



source https://suddione.com/breaking-news-k-annamalai-resigns-from-bjp-primary-membership/

Post a Comment

0 Comments