
ರಾಜ್ಯದಲ್ಲಿ 101 ತಾಲ್ಲೂಕುಗಳು ಬರಪೀಡಿತ, ನೀರಿಗೆ ಅಭಾವ; ಸಚಿವ ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ಭಾರಿ ಪ್ರಮಾಣದಲ್ಲಿ ಮಳೆ ಕೊರತೆಯಾಗಿದ್ದು, ತೀವ್ರ ಬರ ಪರಿಸ್ಥಿತಿ ಎದುರಾಗಿದೆ. ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದೆ.
ಇವುಗಳಲ್ಲಿ 89 ತಾಲ್ಲೂಕುಗಳಲ್ಲಿ ತೀವ್ರ ಬರ ಹಾಗೂ 12 ತಾಲ್ಲೂಕುಗಳಲ್ಲಿ ಸಾಧಾರಣ ಬರ ಪರಿಸ್ಥಿತಿ ಇದೆ. ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಂಪೂರ್ಣ ಸನ್ನದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ತಿಳಿಸಿದರು.
ಈ ಬಾರಿ ಮಳೆ ಕೊರತೆಯಿಂದಾಗಿ ಕೃಷಿ ಕ್ಷೇತ್ರಕ್ಕೆ ಭಾರಿ ಪೆಟ್ಟು ಬಿದ್ದಿದೆ. ದಕ್ಷಿಣ ಒಳನಾಡಿನಲ್ಲಿ ಶೇ 41, ಮಲೆನಾಡಿನಲ್ಲಿ ಶೇ 35, ಉತ್ತರ ಒಳನಾಡಿನಲ್ಲಿ ಶೇ 31 ಹಾಗೂ ಕರಾವಳಿ ಭಾಗದಲ್ಲಿ ಶೇ 24 ರಷ್ಟು ಮಳೆ ಕೊರತೆಯಾಗಿದೆ ಎಂದು ಮಾಹಿತಿ ನೀಡಿದರು.
ಕಳೆದ ವರ್ಷ ರಾಜ್ಯದ ಜಲಾಶಯಗಳಲ್ಲಿ ಒಟ್ಟು 815 ಟಿಎಂಸಿ ಅಡಿ ನೀರು ಸಂಗ್ರಹವಿತ್ತು. ಆದರೆ, ಈ ಬಾರಿ ನೀರಿನ ಪ್ರಮಾಣ 684 ಟಿಎಂಸಿ ಅಡಿಗೆ ಕುಸಿದಿದೆ. ಪರಿಣಾಮವಾಗಿ 2,069 ಗ್ರಾಮ ಪಂಚಾಯಿತಿಗಳಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಲಿದೆ ಎಂದು ಅಂದಾಜಿಸಲಾಗಿದೆ. ಪ್ರಸ್ತುತ 758 ಗ್ರಾಮಗಳಿಗೆ 149 ಟ್ಯಾಂಕರ್ಗಳು ಹಾಗೂ ಬಾಡಿಗೆಗೆ ಪಡೆದ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದರು.
ಶೀಘ್ರದಲ್ಲೇ ಪ್ರಧಾನಮಂತ್ರಿ, ಗೃಹ ಸಚಿವರು ಮತ್ತು ಕೃಷಿ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ನೆರವು ನೀಡುವಂತೆ ಕೋರಲಾಗುವುದು ಎಂದರು.