
ಗೃಹಲಕ್ಷ್ಮಿಗೆ ₹2,443 ಕೋಟಿ ಬಿಡುಗಡೆ: ದಿನೇಶ್ ಗೂಳಿಗೌಡ ಮಾಹಿತಿ
ಬೆಂಗಳೂರು: ‘ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ₹2,443 ಕೋಟಿ ಬಿಡುಗಡೆ ಮಾಡಿದ್ದು, 3–4 ದಿನದಲ್ಲಿ ಕುಟುಂಬದ ಯಜಮಾನಿಯರ ಖಾತೆಗೆ ಹಣ ಜಮೆ ಆಗಲಿದೆ’ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದರು.
ಜಿಬಿಎ ವ್ಯಾಪ್ತಿಯ ಯಲಹಂಕ, ಬ್ಯಾಟರಾಯನಪುರ, ಹೆಬ್ಬಾಳ, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಇದುವರೆಗೆ ಒಟ್ಟು ₹ 62 ಸಾವಿರ ಯಜಮಾನಿಯರ ಬ್ಯಾಂಕ್ ಖಾತೆಗೆ ಹಣ ತಲುಪಿದ್ದು, ಇದೀಗ 32ನೇ ಕಂತಿನ ಹಣ ಬಿಡುಗಡೆ ಆಗಿದೆ’ ಎಂದರು.
‘ದುರುಪಯೋಗ ತಡೆಯುವ ಉದ್ದೇಶದಿಂದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಯನ್ನು ಪರಿಷ್ಕರಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿತರಲ್ಲಿ 1,95,224 ಫಲಾನುಭವಿಗಳು ಮೃತಪಟ್ಟಿದ್ದು ಅವರ ಖಾತೆಗೆ ಸುಮಾರು ₹ 115 ಕೋಟಿ ಸಂದಾಯವಾಗಿದೆ. ಗೃಹಜ್ಯೋತಿ ಯೋಜನೆಯಡಿ ನೀಡಲಾಗುವ ವಿದ್ಯುತ್ ಅನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಆಗುತ್ತಿರುವುದನ್ನು ಪತ್ತೆ ಮಾಡಲಾಗಿದೆ’ ಎಂದರು.
‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಪ್ರತಿ ತಿಂಗಳು ಸಭೆ ನಡೆಸಿ ವರದಿ ನೀಡಬೇಕು. ಸಭೆಗೆ ಬಾರದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಈ ಕುರಿತು ಮುಖ್ಯಮಂತ್ರಿಯ ಗಮನಕ್ಕೂ ತರಲಾಗುವುದು. ಮಾಹಿತಿ ಸಂಗ್ರಹಕ್ಕೆ ಮನೆ ಸರ್ವೆಗೆ ತೆರಳಿದರೆ ಅಪಾರ್ಟ್ಮೆಂಟ್ ಸಂಘದವರು ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಬಂದಿವೆ. ಈ ಕುರಿತು ಸರ್ಕಾರದ ಹಂತದಲ್ಲೇ ಮಾರ್ಗಸೂಚಿ ರಚಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು’ ಎಂದರು.
ವಾಟ್ಸ್ಆ್ಯಪ್ ಗ್ರೂಪ್ ರಚಿಸಿ: ‘ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವಾಗಬೇಕು. ಫಲಾನುಭವಿಗಳ ವಾಟ್ಸ್ಆ್ಯಪ್ ಗ್ರೂಪ್ ರಚಿಸಿ ಕುಂದುಕೊರತೆ ಆಲಿಸಬೇಕು. ಸಮಸ್ಯೆಗಳಿದ್ದರೆ ಬಗೆಹರಿಸಲು, ಯೋಜನೆಗಳ ಮಾಹಿತಿ ನೀಡಲು ವಾಟ್ಸ್ಆ್ಯಪ್ ಗ್ರೂಪ್ ಸಹಕಾರಿ ಆಗಲಿದೆ’ ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಬಿಎ ಅಧ್ಯಕ್ಷ ಕೃಷ್ಣಪ್ಪ, ಬೆಂಗಳೂರು ಉತ್ತರ ವಿಭಾಗದ ಅಧ್ಯಕ್ಷೆ ಲಾವಣ್ಯ ನರಸಿಂಹಮೂರ್ತಿ, ಯಲಹಂಕ, ಹೆಬ್ಬಾಳ, ಬ್ಯಾಟರಾಯನಪುರ ಮತ್ತು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸಭೆಯಲ್ಲಿದ್ದರು.
‘ಮೃತರ ಹೆಸರು ಕೈಬಿಡಲು ಮಾರ್ಗಸೂಚಿ’
‘ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗುತ್ತಿರುವ ಮೃತ ಫಲಾನುಭವಿಗಳ ಹೆಸರನ್ನು 15 ದಿನಗಳಲ್ಲಿ ಪಟ್ಟಿಯಿಂದ ಕೈಬಿಡುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸಲಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಿಗೆ ಇಂದಿರಾ ಕಿಟ್ ವಿತರಿಸುವ ಕಾರ್ಯ ಅಂತಿಮ ಹಂತದಲ್ಲಿ ಇದೆ. ನ್ಯಾಯಬೆಲೆ ಅಂಗಡಿಗಳ ತಿಂಗಳ ಸಭೆ ನಡೆಸಬೇಕು. ವೇಳಾಪಟ್ಟಿ ಪ್ರಕಟಣೆ ಮಾಡಬೇಕು. ದಿನಪೂರ್ತಿ ತೆರೆಯುವಂತೆ ರಾಜ್ಯದ ಎಲ್ಲ ನ್ಯಾಯಬೆಲೆ ಅಂಗಡಿಗಳಿಗೂ ಸರ್ಕಾರ ಆದೇಶ ಹೊರಡಿಸಲಿದೆ’ ಎಂದು ದಿನೇಶ್ ಗೂಳಿಗೌಡ ತಿಳಿಸಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260809-51-890443098