ವಿಪಿಎಫ್ ಪದಾಧಿಕಾರಿಗಳ ಪದಗ್ರಹಣ, ಪ್ರಶಸ್ತಿ ಪ್ರದಾನ ಆ.8ರಂದು
ಮೈಸೂರು: ವಿಪ್ರ ಪ್ರೊಫೆಷನಲ್ ಫೋರಂ(ವಿಪಿಎಫ್) ವತಿಯಿಂದ ಆ.8ರಂದು ಸಂಜೆ 6ಕ್ಕೆ 2026-28ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ‘ವಿಪ್ರರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದ ನಾದಮಂಟಪದಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಕಿರಿಯ ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಮಾರಂಭ ನಡೆಯಲಿದೆ. 10ನೇ ವರ್ಷದ ಸಂಭ್ರಮಾಚರಣೆಯೂ ಇದಾಗಿದೆ.
ಈ ಬಗ್ಗೆ ಗುರುವಾರ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ವಿಪಿಎಫ್ ಅಧ್ಯಕ್ಷ ಎಸ್. ಮುರುಳಿ, ‘ತ್ರಿಮತಸ್ಥ ಬ್ರಾಹ್ಮಣ ಸಮುದಾಯಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ, ಪರಸ್ಪರ ಸಹಕಾರ, ಸೇವಾ ಮನೋಭಾವ, ಸಮಾಜಮುಖಿ ಚಟುವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ತಿಳಿಸಿದರು.
‘ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಪ್ರರು ಪರಸ್ಪರ ಪರಿಚಿತರಾಗಿ, ಅಗತ್ಯ ಸಂದರ್ಭದಲ್ಲಿ ಸಹಕಾರಿ ಆಗಬೇಕು. ವೇದ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶ ಹೊಂದಲಾಗಿದೆ’ ಎಂದರು.
‘ಶಂಕರನಾಥ್ ಜೋಯಿಸ್, ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್, ಉತ್ತರಾದಿ ಮಠದ ಅನಿರುದ್ಧಾಚಾರ್ಯರು ಸೇರಿದಂತೆ ವಿವಿಧ ಕ್ಷೇತ್ರಗಳ 15 ಸಾಧಕರಿಗೆ ‘ವಿಪ್ರರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.
ಜಿಎಸ್ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಶ್ರೀಹರಿ ದ್ವಾರಕನಾಥ್, ವಿಪಿಎಫ್ ಕಾರ್ಯದರ್ಶಿ ಆರ್. ಮಂಜುನಾಥ್ ಶ್ರೀವತ್ಸ, ಉಪಾಧ್ಯಕ್ಷರಾದ ಸುಧೀಂದ್ರ ಹಾಗೂ ಕೆ.ಆರ್. ಸತ್ಯನಾರಾಯಣ್ ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.