
ಬಳ್ಳಾರಿ:ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಆರಂಭ
ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ ಸ್ಥಾಪಿಸಲಾಗಿರುವ ಸಚಿವಾಲಯ ಕಾರ್ಯಾರಂಭ ಮಾಡಿದೆ. ಇಲಾಖೆಗೆ ಸರ್ಕಾರವೂ ಎಲ್ಲ ಸವಲತ್ತುಗಳನ್ನೂ ಒದಿಗಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹಿಂದುಳಿದ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ,ಬೀದರ್ ಜಿಲ್ಲೆಗಳು ಸೇರಿವೆ.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ನಿರ್ಧಾರವನ್ನು ಸಿದ್ಧರಾಮಯ್ಯ ಅವರ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಘೋಷಣೆ ಮಾಡಿತ್ತು. ಸರ್ಕಾರದ ಆದೇಶದಂತೆ ಪ್ರತ್ಯೇಕ ಸಚಿವಾಲಯ ರಚಿಸಲಾಗಿದೆ. ಈ ಸಚಿವಾಲಯ ಪ್ರಸ್ತುತ ಬೆಂಗಳೂರಿನ ಬಹುಮಹಡಿ ಕಟ್ಟಡದ 7ನೇ ಮಹಡಿಯ 2ನೇ ಗೇಟ್ನಲ್ಲಿರುವ ಕೊಠಡಿ ಸಂಖ್ಯೆ 757-758ರಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಸರ್ಕಾರದ ಅಧಿಕೃತ ದಾಖಲೆಗಳಿಂದ ಗೊತ್ತಾಗಿದೆ.
ಈ ಪ್ರತ್ಯೇಕ ಸಚಿವಾಲಯಕ್ಕೆ ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ’ ಎಂದು ಅಧಿಕೃತವಾಗಿ ಹೆಸರಿಡಲಾಗಿದೆ.
ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ’ಯ ಸಚಿವರೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಸಚಿವರವೂ ಆಗಿರಲಿದ್ದಾರೆ ಎಂದು ಸರ್ಕಾರದ ದಾಖಲೆಗಳು ಹೇಳಿವೆ. ಸದ್ಯ ಈ ಇಲಾಖೆಗೆ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಸಚಿವರಾಗಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನದಲ್ಲೇ ಬರುತ್ತದೆ.
16 ಹೊಸ ಹುದ್ದೆಗಳಿಗೆ ಅನುಮೋದನೆ: ಸಚಿವಾಲಯದ ಕಾರ್ಯಭಾರಕ್ಕೆ ಪೂರಕವಾಗಿ ಒಟ್ಟು 16 ಹುದ್ದೆಗಳನ್ನು ಮಂಜೂರು ಮಾಡಿರುವುದಾಗಿ ಸರ್ಕಾರ ತಿಳಿಸಿದೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿ–1, ಸರ್ಕಾರದ ಉಪ/ಜಂಟಿ ಕಾರ್ಯದರ್ಶಿ–1, ಸರ್ಕಾರದ ಅಧೀನ ಕಾರ್ಯದರ್ಶಿ–1, ಶಾಖಾಧಿಕಾರಿ–2, ಹಿರಿಯ ಸಹಾಯಕರು –2, ಸಹಾಯಕರು–2 ಸೇರಿ ಒಟ್ಟು 16 ಹುದ್ದೆಗಳನ್ನು ಇಲಾಖೆಗೆ ನೀಡಲಾಗಿದೆ.
‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಸ್ಥಾಪನೆಗೊಳ್ಳುವ ಪ್ರತ್ಯೇಕ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಲಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಾರೆ. ಮಂಡಳಿಯ ಎಲ್ಲ ಅಧಿಕಾರಿ, ಸಿಬ್ಬಂದಿಯನ್ನು ಒಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371 ಜೆಗೆ ಸಂಬಂಧಿಸಿದ ವಿಷಯ ನಿರ್ವಹಿಸುತ್ತದೆ’ ಎಂದು ಈ ಹಿಂದೆ ಸರ್ಕಾರ ಹೇಳಿತ್ತು.
ಕ್ರಿಯಾ ಯೋಜನೆ ಇನ್ನೂ ಆಗಿಲ್ಲ
ಸಚಿವಾಲಯದ ಅಧೀನದಲ್ಲಿರುವ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 2026-27ನೇ ಸಾಲಿನ ಆಯವ್ಯಯದಲ್ಲಿ ಬಜೆಟ್ನಲ್ಲಿ ₹5,000 ಕೋಟಿ ಅನುದಾನ ಘೋಷಿಸಲಾಗಿದೆ . ಈ ಅನುದಾನವು ಹಣಕಾಸು ಇಲಾಖೆಯ ಅನುಮೋದನೆಗೆ ಒಳಪಟ್ಟಿದ್ದು, ಈ ಮೊತ್ತಕ್ಕೆ ಕ್ರಿಯಾಯೋಜನೆ ರೂಪಿಸಲು ಅನುಮೋದನೆ ನೀಡಲಾಗಿದೆ. ಆದರೆ, ಮಂಡಳಿಯ ಕ್ರಿಯಾಯೋಜನೆ ತಯಾರಿಸುವ ಪ್ರಕ್ರಿಯೆ ಇನ್ನೂ ಮಂಡಳಿಯಲ್ಲಿ ಪ್ರಗತಿಯಲ್ಲಿದೆ ಎಂದು ಸರ್ಕಾರ ತಿಳಿಸಿದೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260822-25-409986780