
ಕೊಳ್ಳೇಗಾಲದಲ್ಲಿ ಅರಣ್ಯಕ್ಕೆ ಬೆಂಕಿ: ಕಿಡಿಗೇಡಿಗಳ ಕೃತ್ಯ ಶಂಕೆ
ಕೊಳ್ಳೇಗಾಲ (ಚಾಮರಾಜನಗರ): ತಾಲ್ಲೂಕಿನ ಜಾಗೇರಿ ಗ್ರಾಮ ವ್ಯಾಪ್ತಿಯ ಶಿಲುಬೆಪುರ ಅರಣ್ಯ ಪ್ರದೇಶದಲ್ಲಿ 10 ರಿಂದ 15 ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ.
ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಕೊಳ್ಳೇಗಾಲ ಬಫರ್ ವಲಯಕ್ಕೆ ಸೇರಿದ ಅರಣ್ಯ ಇದಾಗಿದ್ದು ಬುಧವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.
ಸಿಬ್ಬಂದಿ ಹಾಗೂ ಸ್ಥಳೀಯರು ಜೊತೆಗೂಡಿ ಬೆಂಕಿ ನಂದಿಸಲು ಯತ್ನಿಸಿದರಾದರೂ 10 ಎಕರೆಗೂ ಹೆಚ್ಚಿನ ಅರಣ್ಯ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಮರ–ಗಿಡಗಳು, ಪೊದೆಗಳು ಸುಟ್ಟಿದ್ದು ವನ್ಯಜೀವಿಗಳ ಆವಾಸಸ್ಥಾನಕ್ಕೆ ಹಾನಿಯಾಗಿದೆ.
ಜಾಗೇರಿ ಬಳಿಯ ಕಳ್ಳಬೇಟೆ ತಡೆ ಶಿಬಿರದ ಮೇಲೂ ದುಷ್ಕರ್ಮಿಗಳು ದಾಳಿ ಮಾಡಿ ಧ್ವಂಸಗೊಳಿಸಿದ್ದಾರೆ. ಶಿಬಿರದಲ್ಲಿದ್ದ ಸಾಮಗ್ರಿಗಳಿಗೆ ಬೆಂಕಿ ಹಚ್ಚಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕಾಡಿಗೆ ಬೆಂಕಿ ಹಚ್ಚಿರುವುದು ಕಂಡುಬಂದಿದೆ. ದುಷ್ಕರ್ಮಿಗಳ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಮಲೆ ಮಹದೇಶ್ವರ ವನ್ಯಧಾಮದ ಎಸಿಎಫ್ ವಿರಾಜ್ ಹೊಸೂರು ಪ್ರಜಾವಾಣಿಗೆ ತಿಳಿಸಿದ್ದಾರೆ.