
ಸ್ವಾತಂತ್ರ್ಯೋತ್ಸವ: ಉಡುಪಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ರಿಜ್ವಾನ್ ಅರ್ಷದ್
ಉಡುಪಿ: ಇಲ್ಲಿನ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಸ್ವಾತಂತ್ರ್ಯೋತ್ಸವದ ಅಂಗವಾಗಿ ಶನಿವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೀನುಗಾರಿಕಾ ಚಟುವಟಿಕೆಗಳನ್ನು ಉತ್ತೇಜಿಸುವ ಸಲುವಾಗಿ ಮೀನುಗಾರರಿಗೆ ಉಚಿತವಾಗಿ ನೀಡುವ ಸಲಕರಣೆಗಳ ಮೂಲ ದರವನ್ನು ₹10 ಸಾವಿರದಿಂದ ₹20 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.
ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿ ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಶ್ರೇಷ್ಠತಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ಶಾಸಕ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್ ಉಪಸ್ಥಿತರಿದ್ದರು.