
ಕಲಬುರಗಿ|ಬರ ಘೋಷಣೆಗೆ ರೈತರ ಪಟ್ಟು: ಬಿರುಬಿಸಿನಲ್ಲಿ ರಸ್ತೆ ಮೇಲೆ ಮಲಗಿ ಪ್ರತಿಭಟನೆ
ಕಲಬುರಗಿ: ಜಿಲ್ಲೆಯನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಸುಡು ಬಿಸಿಲಿನಲ್ಲಿ ರಸ್ತೆ ಮಲಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
'ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವಂತೆ ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ಕಲಬುರಗಿಯಲ್ಲೇ ಪ್ರತಿಭಟನೆ ನಡೆಸಲಾಗಿತ್ತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ಕಲಬುರಗಿಯಲ್ಲೇ ಬರಗಾಲ ಸಭೆ ನಡೆಸಿ, ಪರಿಸ್ಥಿತಿ ಅವಲೋಕಿಸಿದ್ದರು. ಇಷ್ಟೆಲ್ಲ ಆದರೂ, ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಜಿಲ್ಲೆಯ ಒಂದೇ ಒಂದು ತಾಲ್ಲೂಕು ಬರ ಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಇಲ್ಲ. ಹೀಗಾಗಿ ಮೂವರು ಸಚಿವರು ಕೂಡಲೇ ರಾಜೀನಾಮೆ ನೀಡಬೇಕು' ಎಂದು ಆಗ್ರಹಿಸಿದರು.
ಟೈರ್ ಸುಡಲು ಮುಂದಾದ ರೈತ ಮುಖಂಡರನ್ನು ಪೊಲೀಸರು ತಡೆದರು. ರಸ್ತೆ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ್ದರಿಂದ ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಮಹೇಶಕುಮಾರ ರಾಠೋಡ ಅವರನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಿಗೆ ಹತ್ತಿಸಿದರು. ಈ ಇದನ್ನು ಖಂಡಿಸಿ ರೈತ ಮುಖಂಡರು ಪೊಲೀಸ್ ವಾಹನದ ಎದುರು ಮಲಗಿ ಆಕ್ರೋಶ ವ್ಯಕ್ತಪಡಿಸಿದರು.
ಮೌಲಾ ಮುಲ್ಲಾ, ಸಿದ್ದು ಕರಗೊಂಡ, ಉಮಾಪತಿ ಪಾಟೀಲ, ಸಾಜೀದಅಹ್ಮದ್, ಭೀಮಾಶಂಕರ ಮಾಡಿಯಾಳ ಸೇರಿದಂತೆ ಹಲವರು ಪಾಲ್ಗೊಂಡಿದ್ದರು