
ದಾವಣಗೆರೆ: ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
ದಾವಣಗೆರೆ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶನಿವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ತೆರದ ಜೀಪಿನಲ್ಲಿ ಕ್ರೀಡಾಂಗಣದಲ್ಲಿ ಸಂಚರಿಸಿ ಪರೇಡ್ ವೀಕ್ಷಣೆ ಮಾಡಿದರು. ಬಳಿಕ ಆಕರ್ಷಕ ಪಥಸಂಚಲನ ನಡೆಯಿತು. ಪೊಲೀಸ್ ಪಡೆ, ಎನ್ಸಿಸಿ, ಎನ್ಎಸ್ಎಸ್ ಹಾಗೂ ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳ ತಂಡಗಳು ಪಥಸಂಚನದಲ್ಲಿ ಪಾಲ್ಗೊಂಡಿದ್ದವು.
‘ಜಿಲ್ಲೆಯ 485 ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈವರೆಗೆ ಇಲ್ಲಿನ 26,732 ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗಿದೆ. ಭೂಸುರಕ್ಷಾ ಯೋಜನೆಯಡಿ ಜಿಲ್ಲೆಯ 5.51 ಲಕ್ಷ ಕಡತಗಳನ್ನು ಡಿಜಿಟಲೀಕರಣ ಮಾಡಲಾಗಿದೆ' ಎಂದು ಸಚಿವ ಮಲ್ಲಿಕಾರ್ಜುನ್ ತಿಳಿಸಿದರು.
‘ಜಿಲ್ಲೆಯಲ್ಲಿ 31 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. 65 ಗ್ರಾಮಗಳು ದಿನದ 24 ಗಂಟೆ ಕುಡಿಯುವ ನೀರಿನ ಸೌಲಭ್ಯ ಪಡೆದಿವೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ1.4 ಲಕ್ಷ ರೈತರು ವಿಮೆ ನೋಂದಣಿ ಮಾಡಿಕೊಂಡಿದ್ದಾರೆ' ಎಂದು ಹೇಳಿದರು.
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕ ಸಮರ್ಥ್ ಮಲ್ಲಿಕಾರ್ಜುನ್, ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಂಜಪ್ಪ, ಪೂರ್ವ ವಲಯದ ಐಜಿಪಿ ಬಿ.ಆರ್.ರವಿಕಾಂತೇಗೌಡ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್ ಹಾಜರಿದ್ದರು.