ನಂಜನಗೂಡಿನಲ್ಲಿ ಬರ ಪರಿಸ್ಥಿತಿ ವೀಕ್ಷಿಸಿದ ಸಚಿವ ಯತೀಂದ್ರ
ಮೈಸೂರು: ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಬರಗಾಲದ ಪರಿಸ್ಥಿತಿಯನ್ನು ವೀಕ್ಷಿಸಿದರು.
ಹನುಮನಪುರ ಗ್ರಾಮದಲ್ಲಿ ಬೆಳೆ ಒಣಗಿರುವುದನ್ನು ವೀಕ್ಷಿಸಿದರು. ಅಧಿಕಾರಿಗಳು ಹಾಗೂ ರೈತರಿಂದಲೂ ಮಾಹಿತಿ ಪಡೆದರು.
ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆ ಉಂಟಾಗಿದೆ. ರೈತರು ಬೆಳೆದ ಬೆಳೆಗಳು ಮಳೆ ಇಲ್ಲದೆ ಒಣಗುತ್ತಿವೆ. ಹೆಚ್ಚಿನ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ’ ಎಂದು ತಿಳಿಸಿದರು.
‘ಕುಡಿಯುವ ನೀರಿನ ಬಳಕೆಗೆ ಕಾರ್ಯ ಗ್ರಾಮದಲ್ಲಿ 12 ಕೊಳವೆಬಾವಿಗಳನ್ನು ಕೊರೆಸಿದ್ದು, ಇದರಲ್ಲಿ 3ರಲ್ಲಿ ಮಾತ್ರ ನೀರು ಬರುತ್ತಿವೆ. ಗ್ರಾಮಸ್ಥರ ಕೋರಿಕೆಯ ಮೇರೆಗೆ ಕೆರೆಯ ಬಳಿ ಮತ್ತೊಂದು ಕೊಳವೆಬಾವಿ ಕೊರೆಸುವಂತೆ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಎಂಜಿನಿಯರ್ಗೆ ಸೂಚಿಸಲಾಗಿದೆ. ಅದರಲ್ಲೂ ನೀರು ಬಾರದಿದ್ದರೆ ಟ್ಯಾಂಕರ್ ಮೂಲಕ ಪೂರೈಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಲಾಗಿದೆ’ ಎಂದರು.
‘ಬರ ಅಧ್ಯಯನಕ್ಕೆ ನೇಮಿಸಿರುವ ಸಚಿವರು ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ವಾಸ್ತವ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ಅದರಂತೆ ಪ್ರವಾಸ ಮಾಡುತ್ತಿದ್ದೇನೆ. ಜಿಲ್ಲೆಯಲ್ಲಿ ಎಲ್ಲೆಲ್ಲಿ ಬರ ಇದೆಯೋ ಆ ತಾಲ್ಲೂಕುಗಳಿಗೆ ಭೇಟಿ ನೀಡಲಿದ್ದೇನೆ. ಪರಿಸ್ಥಿತಿ ಅವಲೋಕಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ’ ಎಂದು ಹೇಳಿದರು.
‘ಕಬಿನಿ ಜಲಾಶಯ ತುಂಬಿದ್ದು, ನಮ್ಮೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಕೆರೆ–ಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ. ದನಕರುಗಳಿಗೆ ಕುಡಿಯಲು ನೀರು ದೊರೆಯುತ್ತದೆ. ನಾಲೆಗಳಲ್ಲಿ ಹೂಳು ತುಂಬಿದ್ದು ಅದನ್ನು ತೆಗೆಸಬೇಕು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಪರಿಹರಿಸಬೇಕು’ ಎಂದು ಗ್ರಾಮಸ್ಥರು ಸಚಿವರನ್ನು ಕೋರಿದರು.
ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ಜಿ.ಪಂ. ಸಿಇಒ ಎಸ್. ಯುಕೇಶ್ ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್. ರವಿ ಪಾಲ್ಗೊಂಡಿದ್ದರು.