
ಚಿಕ್ಕಬಳ್ಳಾಪುರ: ಬಡವರಿಗೆ ಹಂಚಿಕೆಯಾದ ಜಮೀನು ಅನ್ಯರ ಪಾಲು
ಚೇಳೂರು: ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದರೆ ಬಡವರಿಗೆ ತಲುಪಬೇಕಾದ ಸೌಲಭ್ಯ ಮರೀಚಿಕೆ ಆಗುತ್ತದೆ ಎನ್ನುವುದಕ್ಕೆ ತಾಲ್ಲೂಕಿನ ನಾರೇಮದ್ದೇಪಲ್ಲಿ ಗ್ರಾಮ ಪಂಚಾಯಿತಿಯ ಯರ್ರಗುಡಿಯಲ್ಲಿ ಬಡವರ ನಿವೇಶನಕ್ಕಾಗಿ ಹಂಚಿಕೆಯಾಗಿರುವ ಜಮೀನು ನಿದರ್ಶನದಂತಿದೆ.
ಯರ್ರಗುಡಿಯಲ್ಲಿ 2.20 ಎಕರೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಮಂಜೂರಾಗಿದೆ. ಯೋಜನೆಯಡಿ ಈಗಾಗಲೇ 34 ಫಲಾನುಭವಿಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಲಾಗಿತ್ತು. ದಶಕಗಳಿಂದ ಸ್ವಂತ ಸೂರು ಕಾಣದ ಬಡವರಿಗೆ ಈ ಜಮೀನು ಮಂಜೂರಾಗಿರುವುದು ಸಮಾಧಾನ ತಂದಿತ್ತು.
ಆದರೆ ಬಡವರ ಪಾಲಿನ ಸೂರಿನ ಆಸರೆಯಾಗಬೇಕಿದ್ದ ಈ ಜಮೀನಿನ ಮೇಲೆ ಕಣ್ಣು ಹಾಕಿರುವ ನೆರೆಹೊರೆಯ ಜಮೀನಿನ ಮಾಲೀಕರು, ಮಂಜೂರಾದ ಜಮೀನನ್ನು ಈಗಾಗಲೇ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿದೆ. ಇದು ಫಲಾನುಭವಿಗಳಲ್ಲಿ ತೀವ್ರ ಆತಂಕ ಹಾಗೂ ಅಸಮಾಧಾನ ಮೂಡಿಸಿದೆ. ಸ್ಥಳೀಯ ಆಡಳಿತ ಹಾಗೂ ಸಂಬಂಧಪಟ್ಟ ಕಂದಾಯ ಇಲಾಖೆಯ ನಿರ್ಲಕ್ಷ್ಯಕ್ಕೆ ಇದು ಕನ್ನಡಿ ಎಂದು ಜನರು ದೂರಿದ್ದಾರೆ.
ವರ್ಷಗಳ ಕಾಲ ಬಾಡಿಗೆ ಮನೆಗಳಲ್ಲಿ, ಗುಡಿಸಲುಗಳಲ್ಲಿ ಮತ್ತು ಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದ ಬಡ ಫಲಾನುಭವಿಗಳು ಕೊನೆಗೂ ನಮಗೆ ನಿವೇಶನ ಸಿಕ್ಕಿತು, ಸ್ವಂತ ಮನೆಯೊಂದನ್ನು ಕಟ್ಟಿಕೊಳ್ಳಬಹುದು ಎಂದು ಕನಸು ಕಂಡಿದ್ದರು. ಆದರೆ, ತಮ್ಮ ಪಾಲಿನ ಜಮೀನು ಅನ್ಯರ ಪಾಲಾಗಿರುವ ಅಥವಾ ಒತ್ತುವರಿ ಆಗಿರುವ ವಿಷಯ ತಿಳಿಯುತ್ತಿದ್ದಂತೆ ಕಣ್ಣೀರು ಹಾಕುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಭೂಮಿಯ ಬೆಲೆ ದುಬಾರಿಯಾಗಿದೆ. ತಾಲ್ಲೂಕಿನಲ್ಲಿ ಸರ್ಕಾರಿ ಹಾಗೂ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಮೀನುಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದರೊಂದಿಗೆ ಕಮಿಷನ್ ಆಸೆಗಾಗಿ ಇಂತಹ ಕಾನೂನು ಬಾಹಿರ ವ್ಯವಹಾರಗಳಿಗೆ ಕುಮ್ಮಕ್ಕು ನೀಡುವ ಸ್ಥಳೀಯ ಮಧ್ಯವರ್ತಿಗಳ ಹಾವಳಿಯೂ ಮಿತಿಮೀರಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸರ್ಕಾರಿ ಜಮೀನು ಒತ್ತುವರಿಯಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದರೂ ಸಂಬಂಧಪಟ್ಟ ಕಂದಾಯ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಾಣಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಡವರ ಹಕ್ಕುಗಳ ರಕ್ಷಣೆಯಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿವೇಶನ ಒತ್ತುವರಿದಾರರಿಂದ ಮುಕ್ತಗೊಳಿಸಬೇಕು. ತಾಲ್ಲೂಕು ಆಡಳಿತ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಸ್ಥಳಕ್ಕೆ ಭೇಟಿ ನೀಡಿ ಸರ್ವೆ ನಡೆಸಬೇಕು. ಒತ್ತುವರಿ ಆಗಿರುವ ಜಮೀನು ತೆರವುಗೊಳಿಸಬೇಕು. ಅರ್ಹ 34 ಫಲಾನುಭವಿಗಳಿಗೆ ಕೂಡಲೇ ನಿವೇಶನಗಳ ಹಕ್ಕುಪತ್ರ ವಿತರಿಸಿ ನ್ಯಾಯ ಒದಗಿಸಬೇಕು ಎಂದು ನಿವೇಶನ ರಹಿತರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260817-16-1821190899