
ಮಂಡ್ಯ: ಹುರುಳಿಕಾಳು ಹುರಿದು, ಖಾಲಿ ಮಡಿಕೆ ಹಿಡಿದು ರಸ್ತೆಗಿಳಿದ ಹೋರಾಟಗಾರರು
ಮಂಡ್ಯ: ತಮಿಳುನಾಡಿಗೆ ನೀರು ಹರಿಸಬೇಕು ಎಂಬ ಆದೇಶ ಖಂಡಿಸಿ ಮಂಡ್ಯ ಜಿಲ್ಲೆಯ ವಿವಿಧೆಡೆ ಪ್ರತಿಭಟನಕಾರರು ಗುರುವಾರ ಬೆಳಿಗ್ಗೆಯಿಂದಲೇ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ.
"ಕರ್ನಾಟಕ ಬಂದ್" ಅಂಗವಾಗಿ ಗುರುವಾರ ಖಾಲಿ ಮಡಿಕೆ ಪ್ರದರ್ಶಿಸಿ ಕನ್ನಡ ಸೇನೆ, ರೈತಸಂಘ ಮತ್ತು ವಿವಿಧ ಸಂಘಟನೆಗಳು ಮಂಡ್ಯ ನಗರದಲ್ಲಿ ಪ್ರತಿಭಟನೆ ಆರಂಭಿಸಿವೆ.
ನಗರದ ಜೆ.ಸಿ. ವೃತ್ತದಲ್ಲಿ (ಸಂಜಯ ವೃತ್ತ) ಬೆಳಿಗ್ಗೆಯಿಂದ ಪ್ರತಿಭಟನೆ ಆರಂಭಗೊಂಡಿದೆ.
ಹಳೇ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಹುರುಳಿ ಕಾಳು ಹುರಿದು ಸರ್ಕಾರದ ವಿರುದ್ಧ ಆಕ್ರೋಶ
ರಾಜ್ಯ ಸರ್ಕಾರ ಮಂಡ್ಯ ರೈತರಿಗೆ ಹುರುಳಿ ಭಾಗ್ಯ ನೀಡಿದೆ. ಕಬ್ಬು, ಭತ್ತ ಬೆಳೆಗೆ ನೀರಿಲ್ಲದಂತಾಗಿದೆ. ಹೀಗಾಗಿ ಮಳೆಯಾಶ್ರಿತ ಪ್ರದೇಶದಲ್ಲಿ ಬೆಳೆಯುವ ಹುರುಳಿ ಬೆಳೆ ಬೆಳೆಯುವಂತಾಗಿದೆ ಎಂದು ಕಿಡಿಕಾರಿದರು.
ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಮಿಳುನಾಡಿಗೆ ಒಂದು ಹನಿ ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಬಸ್, ಆಟೊ, ಶಾಲಾ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಇದುವರೆಗೆ (ಬೆಳಿಗ್ಗೆ 9.30) ಯಾವುದೇ ಅಡ್ಡಿ ಉಂಟಾಗಿಲ್ಲ. ಸರ್ಕಾರಿ ಕಚೇರಿ, ಶಾಲೆ, ಆಸ್ಪತ್ರೆಗಳು ಎಂದಿತೆ ಕಾರ್ಯಾರಂಭ ಮಾಡಿವೆ.
ಕೆಲವು ವಾಣಿಜ್ಯ ಮಳಿಗೆ, ಹೋಟೆಲ್, ಅಂಗಡಿಗಳು ಎಂದಿನಂತೆ ತೆರೆದಿವೆ. ಕೆಲವು ಕಡೆ ಪ್ರತಿಭಟನಕಾರರು ಬಲವಂತದಿಂದ ಅಂಗಡಿ ಮುಚ್ಚಿಸುವ ದೃಶ್ಯ ಕಂಡು ಬಂದಿತು.
ಮಂಡ್ಯ ನಗರದ ಪ್ರಮುಖ ವೃತ್ತಗಳಲ್ಲಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.