
ಉಡುಪಿ | ಕಾಂಗ್ರೆಸ್ ಮುಖಂಡನ ಹತ್ಯೆ: ಮೂವರು ಸುಪಾರಿ ಹಂತಕರ ಬಂಧನ
ಉಡುಪಿ: ಕಾಪು ತಾಲ್ಲೂಕಿನ ಮುದರಂಗಡಿ ಪೇಟೆಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಸುಪಾರಿ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿಸುವ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಉತ್ತರ ಪ್ರದೇಶದ ರಾಜು (42), ಉತ್ತರಾಖಂಡದ ಅಜಯ್ ರಸ್ತೋಗಿ ಅಲಿಯಾಸ್ ಅನ್ಮೋಲ್ (23), ಬಿಹಾರದ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ (38) ಬಂಧಿತ ಆರೋಪಿಗಳು.
ಆರೋಪಿ ರಾಜು ಕಾಲಿಗೆ ಗುಂಡೇಟು ತಗುಲಿದ್ದು, ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ನಡೆಸಿದ ದಾಳಿಯಲ್ಲಿ ಪಿಎಸ್ಐ ತೇಜಸ್ವಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
‘ಪಡುಬಿದ್ರಿಯ ಯುಪಿಸಿಎಲ್ನ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದ ಹಣದ ವ್ಯವಹಾರದ ವಿಚಾರವಾಗಿ ಹೊರ ರಾಜ್ಯದ ವ್ಯಕ್ತಿಯೊಬ್ಬರು ಆರೋಪಿಗಳಿಗೆ ಸುಪಾರಿ ನೀಡಿರುವ ಸಾಧ್ಯತೆ ಇದೆ. ತನಿಖೆ ನಡೆಯುತ್ತಿದೆ’ ಎಂದು ಎಸ್ಪಿ ಹೇಳಿದ್ದಾರೆ.