
ಬೇಲೂರು: ರಸ್ತೆ ಕಾಮಗಾರಿ ವಿಳಂಬದಿಂದ ಸಂಚಾರಕ್ಕೆ ಅಡ್ಡಿ
ಬೇಲೂರು: ಪಟ್ಟಣದ ಕೆಂಪೇಗೌಡ ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬ ಆಗುತ್ತಿರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಬಿಕ್ಕೋಡು, ಸಕಲೇಶಪುರ ಸೇರಿ ವಿವಿಧ ಊರುಗಳಿಗೆ ಸಂಪರ್ಕ ನೀಡುವ ರಾಜ್ಯ ಹೆದ್ದಾರಿಯಾದ ಈ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯಿಂದ ₹3.10 ಕೋಟಿ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಕೆಂಪೇ ಗೌಡ ವೃತ್ತದಿಂದ ಕಲ್ಯಾಣಿಯವರೆಗೆ 600 ಮೀಟರ್ ರಸ್ತೆಯನ್ನು ವಿಸ್ತೀರ್ಣಗೊಳಿಸಿ, ಎರಡು ಬದಿಗಳಲ್ಲಿ ಚರಂಡಿ ನಿರ್ಮಿಸುವ ಕಾಮಗಾರಿ ಹತ್ತು ತಿಂಗಳ ಹಿಂದೆ ಪ್ರಾರಂಭವಾಗಿದ್ದು, ಇನ್ನೂ ಮುಗಿಯದ್ದರಿಂದ ಈ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.
ರಸ್ತೆಯ ಹಲವೆಡೆ ಮಣ್ಣು, ಕಲ್ಲು ರಾಶಿ ಬಿದ್ದಿದ್ದು, ಅಲ್ಲಲ್ಲಿ ಗುಂಡಿಗಳು ಉಂಟಾಗಿವೆ. ರಸ್ತೆ ಬದಿಯಲ್ಲಿ ಪುರಸಭೆಯವರು ಒಳಚರಂಡಿ ಸಂಪರ್ಕಕ್ಕಾಗಿ ತೋಡಿರುವ ಕಾಲುವೆಗಳಿಂದ ಸಂಚಾರಕ್ಕೆ ಲಭ್ಯವಿರುವ ಜಾಗ ಮತ್ತಷ್ಟು ಕಡಿಮೆಯಾಗಿದೆ. ಇದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ವಾಹನ ಸವಾರರು, ಪಾದಚಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಅಪಘಾತದ ಆತಂಕವೂ ಹೆಚ್ಚಾಗುತ್ತಿದೆ.
ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸೂಕ್ತ ಬ್ಯಾರಿಕೇಡ್, ಎಚ್ಚರಿಕೆ ಫಲಕ ಹಾಗೂ ಸಮರ್ಪಕ ಸಂಚಾರ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ.
ಮಳೆ ಬಂದ ಸಂದರ್ಭದಲ್ಲಿ ರಸ್ತೆಯ ಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಜನರು ಹೇಳುತ್ತಿದ್ದಾರೆ.
ಅವೈಜ್ಞಾನಿಕವಾಗಿ ಬಾಕ್ಸ್ ಚರಂಡಿ ನಿರ್ಮಿಸಿರುವುದರಿಂದ ಕೆಂಪೇಗೌಡ ರಸ್ತೆಯ ಅಡ್ಡರಸ್ತೆಗಳಿಗೆ ತೆರಳಲು ತೊಂದರೆ ಆಗುತ್ತಿದೆ. ನೀರು ಮನೆಗಳಿಗೆ ನುಗ್ಗುವ ಸಾಧ್ಯತೆಗಳಿವೆ ಎಂದು ಸ್ಥಳೀಯ ನಿವಾಸಿ ಹರ್ಷ ಹೇಳುತ್ತಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪುರಸಭೆ ಮುಖ್ಯಾಧಿಕಾರಿ ಬಸವರಾಜು ಟಾಕಪ್ಪ ಶಿಗ್ಗಾವಿ, ಹಳೆಯ ಒಳಚರಂಡಿ ಸಂಪರ್ಕದಲ್ಲಿ ನೀರು ಸರಾಗವಾಗಿ ಹೋಗುತ್ತಿರಲಿಲ್ಲ. ಹಾಗಾಗಿ ಹೊಸ ಸಂಪರ್ಕ ಮಾಡಲಾಗುತ್ತಿದ್ದು, ಮೂರು ದಿನಗಳಲ್ಲಿ ಕೆಲಸ ಮುಗಿಸಲಾಗುವುದು ಎಂದು ತಿಳಿಸಿದರು.
ಗುತ್ತಿಗೆದಾರರಿಂದ ಕಾಮಗಾರಿ ವಿಳಂಬವಾಗುತ್ತಿದ್ದು, ಗುತ್ತಿಗೆದಾರರಿಗೆ ನೋಟೀಸ್ ನೀಡಿ, ಶೀಘ್ರ ಮುಗಿಸುವಂತೆ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸೋಮಶೇಖರ್ ಹೇಳಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260822-36-1308000331