ಯೋಜನೆಗಳ ಪ್ರಗತಿ ಪರಿಶೀಲಿಸಿದ ನೈರುತ್ಯ ರೈಲ್ವೆ ವ್ಯವಸ್ಥಾಪಕ ಅನಂತ್
ಮೈಸೂರು: ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಅವರು ಮೈಸೂರು ವಿಭಾಗದ ವಿವಿಧ ಘಟಕಗಳು ಹಾಗೂ ಮೂಲಸೌಕರ್ಯವನ್ನು ಪರಿಶೀಲಿಸಿದರು.
ನಗರದ ರೈಲ್ವೆ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಆರೋಗ್ಯ ಸೇವೆಗಳ ಗುಣಮಟ್ಟ ಹಾಗೂ ರೋಗಿಗಳ ಆರೈಕೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳೊಂದಿಗೆ ಸಂವಾದ ನಡೆಸಿ, ವೈದ್ಯಕೀಯ ಉಪಕರಣಗಳು, ಆರೋಗ್ಯ ಸೌಲಭ್ಯಗಳು ಹಾಗೂ ಅಗತ್ಯ ಮೂಲಸೌಕರ್ಯಗಳ ಲಭ್ಯತೆಯನ್ನು ವೀಕ್ಷಿಸಿದರು.
ರೈಲ್ವೆ ನೌಕರರು ಮತ್ತು ಅವರ ಕುಟುಂಬಗಳಿಗೆ ಉತ್ತಮ, ಸಮಯೋಚಿತ ಹಾಗೂ ರೋಗಿ-ಕೇಂದ್ರಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಂತೆ ಸೂಚಿಸಿದರು. ಆಸ್ಪತ್ರೆಯನ್ನು ಆಧುನಿಕ ಸೌಲಭ್ಯಗಳಿಂದ ಸಜ್ಜುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಮೈಸೂರು–ಚಾಮರಾಜನಗರ ವಿಭಾಗದಲ್ಲಿ ವಿಂಡೊಟ್ರೈಲಿಂಗ್ ಪರಿಶೀಲನೆ ನಡೆಸಿದರು. ನಂಜನಗೂಡಿನಲ್ಲಿ ಸ್ಟೇಷನ್ಮಾಸ್ಟರ್ ಪ್ಯಾನೆಲ್, ನಿಲ್ದಾಣ ಆವರಣ ಹಾಗೂ ರೈಲು ಹಳಿಗಳ ಪಾಯಿಂಟ್ಗಳನ್ನು ಪರಿಶೀಲಿಸಿದರು. ಚಾಮರಾಜನಗರ ನಿಲ್ದಾಣದಲ್ಲಿ ಅಮೃತ ಭಾರತ್ ಸ್ಟೇಷನ್ ಯೋಜನೆ (ಎಬಿಎಸ್ಎಸ್)ಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯ ಮಾಹಿತಿ ಪಡೆದರು.
ಸ್ಟೇಷನ್ಮಾಸ್ಟರ್ ಪ್ಯಾನೆಲ್ ಬೋರ್ಡ್ ಹಾಗೂ ನಂಜನಗೂಡು–ಚಾಮರಾಜನಗರ ವಿಭಾಗದ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 35ಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದರೊಂದಿಗೆ ಗುಣಮಟ್ಟ ಮತ್ತು ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಿದರು.
ಮೈಸೂರು ವಿಭಾಗೀಯ ಕಚೇರಿಯಲ್ಲಿ ಸಭೆ ನಡೆಸಿದ ಅವರು, ವಿಭಾಗದ ಕಾರ್ಯಕ್ಷಮತೆ ಹಾಗೂ ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲಿಸಿದರು. ಕಾರ್ಯಾಚರಣೆ ಬಲಪಡಿಸುವುದು, ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ಹಾಗೂ ಪ್ರಯಾಣಿಕರ ಸೇವೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ಸಿಪಿಎಂ (ಗತಿಶಕ್ತಿ) ಆನಂದ ಭಾರತಿ, ಮುಖ್ಯ ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ.ಅಶೋಕ್ ಕುಮಾರ್ ಪಾಲ್ಗೊಂಡಿದ್ದರು.