
ಗದಗ | ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ಬಿಜೆಪಿ ಪ್ರತಿಭಟನೆ
ಗದಗ: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ನಗರದ ಜಿಲ್ಲಾಡಳಿತ ಭವನದ ಎದುರು ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲಿ ಆರೋಪಿತ ನಾಗೇಂದ್ರ ರಾಜೀನಾಮೆ ಪಡೆಯಲಾಗಿತ್ತು. ಆದರೆ, ಈ ಬಾರಿ ಸಚಿವ ಸ್ಥಾನ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಸಮರ್ಥವಾಗಿ ಅಧಿಕಾರ ನಡೆಸಲಾಗುತ್ತಿಲ್ಲ. ಭ್ರಷ್ಟಾಚಾರದ ಸರಮಾಲೆಯೇ ಸುತ್ತಿಕೊಂಡಿದೆ ಎಂದು ಮುಖಂಡರು ಆರೋಪಿಸಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೆಲವರಿಗಷ್ಟೇ ನೀಡಲಾಗಿದೆ. ಒಂದು ಕೋಮಿನ ಓಲೈಕೆಯಲ್ಲಿ ಕಾಂಗ್ರೆಸ್ ತೊಡಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖಂಡ ಶಶಿಧರ ದಿಂಡೂರ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಹಣ ಕೊಳ್ಳೆ ಹೊಡೆಯುತ್ತಿದೆ. ಅತ್ಯಂತ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ನಾಗೇಂದ್ರ ಪರಿಶಿಷ್ಟ ಸಮಾಜದ ಹಣವನ್ನು ಲೂಟಿ ಮಾಡಿದ್ದಾರೆ. ಬೇನಾಮಿ ಖಾತೆಗಳಿಗೆ ಹಣ ವರ್ಗಾವಣೆ ಆಗಿರುವ ಡೆತ್ ನೋಟ್ ಬರೆದಿಟ್ಟು ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡರು. ಬಿಜೆಪಿ ನಾಯಕರ ಹೋರಾಟದ ಫಲವಾಗಿ, ಭ್ರಷ್ಟಾಚಾರ ನಡೆದಿದ್ದನ್ನು ಕಾಂಗ್ರೆಸ್ ಸರ್ಕಾರ ಒಪ್ಪಿಕೊಂಡಿತು. ಆನಂತರ ರಾಜೀನಾಮೆ ಪಡೆಯಲಾಯಿತು ಎಂದರು.
ಬಿ. ನಾಗೇಂದ್ರ ಸಚಿವ ಸ್ಥಾನವಷ್ಟೇ ಅಲ್ಲದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯುವವರೆಗೆ ಹೋರಾಟ ಬಿಡಬಾರದು. ವಾಲ್ಮೀಕಿ ನಿಗಮದ ಹಣ ಲಪಟಾಯಿಸಿ, ಆ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ನಾಯಕರು ಬಿಡುವುದಿಲ್ಲ ಎಂದು ಹೇಳಿದರು.
ಭ್ರಷ್ಟಾಚಾರ ಎಸಗಿದ ನಾಗೇಂದ್ರ ಅವರನ್ನು ಜೈಲಿಗೆ ಅಟ್ಟುವ ಬದಲು ಸಚಿವ ಸ್ಥಾನ ನೀಡಲಾಗಿದೆ. ಇಂಥವರಿಗೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನಿಡುತ್ತಿದೆ. ರಾಜ್ಯದಲ್ಲಿ ತುಘಲಕ್ ಸರ್ಕಾರವಿದೆ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ, ಮುಖಂಡ ಎಂ.ಎಸ್. ಕರಿಗೌಡ್ರ, ಸಂತೋಷ ಅಕ್ಕಿ, ರಾಘವೇಂದ್ರ ಯಲವತ್ತಿ, ವಿನಾಯಕ ಮಾನ್ವಿ, ನಾಗರಾಜ ತಳವಾರ, ಅನಿಲ್ ಅಬ್ಬಿಗೇರಿ, ನಿರ್ಮಾಲಾ ಕೊಳ್ಳಿ, ವಂದನಾ ವೆರ್ಣೇಕರ ಇದ್ದರು.