
ಹೊಂಡಮಯವಾದ ಮುದರಂಗಡಿ– ನಂದಿಕೂರು ರಸ್ತೆ: ವಾಹನ ಸಂಚಾರ ದುಸ್ತರ
ಪಡುಬಿದ್ರಿ: ಮುದರಂಗಡಿ– ನಂದಿಕೂರು ಸಂಪರ್ಕಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚಾರ ಸಮಸ್ಯೆ ಎದುರಿಸುವಂತಾಗಿದೆ.
ಈ ರಸ್ತೆಯು ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ನಂದಿಕೂರು ಮೂಲಕ ಮುದರಂಗಡಿ-ಶಿರ್ವವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ.
ಲೋಕೋಪಯೋಗಿ ಇಲಾಖೆಗೆ ಸೇರಿದ ಈ ರಸ್ತೆಯು ಕೈಗಾರಿಕಾ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಈ ಭಾಗದಲ್ಲಿ ಹಲವು ಬೃಹತ್ ಉದ್ದಿಮೆಗಳು, ಕೈಗಾರಿಕಾ ಘಟಕಗಳು ಹಾಗೂ ಶಿಕ್ಷಣ ಸಂಸ್ಥೆಗಳಿವೆ. ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದ್ದು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ರಸ್ತೆಯನ್ನೇ ಅವಲಂಬಿಸಿದ್ದಾರೆ.
ರಸ್ತೆಯಲ್ಲಿ ಹಲವೆಡೆ ಗುಂಡಿಗಳು ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಂತು ರಸ್ತೆ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಅಪಾಯ ಎದುರಿಸುವಂತಾಗಿದೆ. ವಾಹನಗಳ ಸಂಚಾರವೂ ನಿಧಾನಗೊಳ್ಳುತ್ತಿದೆ. ಕೈಗಾರಿಕಾ ಪ್ರದೇಶಕ್ಕೆ ಸಂಚರಿಸುವ ಭಾರಿ ವಾಹನಗಳ ಸಂಖ್ಯೆಯೂ ಹೆಚ್ಚಿರುವುದರಿಂದ ರಸ್ತೆ ಮತ್ತಷ್ಟು ಹಾಳಾಗುತ್ತಿದೆ.
ರಸ್ತೆಯ ಕೆಲವು ಕಡೆ ಡಾಂಬರೀಕರಣ ಕಾಮಗಾರಿ ನಡೆದಿದ್ದರೂ, ಬೆಳ್ಳೆಬೆಟ್ಟು ಪರಿಸರದಲ್ಲಿ ರಸ್ತೆ ತೀರಾ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ. ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ಸೇರಿದಂತೆ ಅಗತ್ಯ ಸೇವೆಗಳ ವಾಹನಗಳ ಸಂಚಾರಕ್ಕೂ ತೊಂದರೆಯಾಗುವ ಆತಂಕ ಎದುರಾಗಿದೆ.
ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ರಸ್ತೆಯ ಗುಂಡಿಗಳನ್ನು ಮುಚ್ಚುವುದರ ಜತೆಗೆ ಮುದರಂಗಡಿ–ನಂದಿಕೂರು ರಸ್ತೆಯ ಸಮಗ್ರ ಅಭಿವೃದ್ಧಿಗೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಲೋಕೋಪಯೋಗಿ ಇಲಾಖೆಗೆ ಸೇರಿದ ಮುದರಂಗಡಿ– ನಂದಿಕೂರು ರಸ್ತೆ ತೀರಾ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಪರಿಶೀಲನೆ ನಡೆಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ರಿಯಾಝ್ ಮುದರಂಗಡಿ, ಲಯನ್ಸ್ ಕ್ಲಬ್ ಅಧ್ಯಕ್ಷ
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260816-28-1690600262