
ಬೆಂಗಳೂರು: ತಲೆಮರೆಸಿಕೊಂಡಿದ್ದ ರೌಡಿ ಮಂಜುನಾಥ್ ಅಲಿಯಾಸ್ ‘ಧಮ್ಕಿ’ ಮಂಜ ಸೆರೆ
ಬೆಂಗಳೂರು: ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮಂಜುನಾಥ್ ಅಲಿಯಾಸ್ ‘ಧಮ್ಕಿ’ ಮಂಜ ಎಂಬಾತನನ್ನು ಸಿಸಿಬಿಯ ಸಂಘಟಿತ ಅಪರಾಧ ದಳ(ಪಶ್ಚಿಮ) ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ನೈರುತ್ಯ ವಿಭಾಗದ ಪ್ರಮುಖ ರೌಡಿಯ ಸಹಚರ ಮಂಜುನಾಥ್. ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಆಧರಿಸಿ ಸಿಸಿಬಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸ್ಯಾಟಲೈಟ್ ಬಸ್ ನಿಲ್ದಾಣ ಬಳಿ ಬಂಧಿಸಿದೆ.
ಮಂಜುನಾಥ್ ವಿರುದ್ಧ 2017ರಲ್ಲಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಲ್ಲಿ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆರೋಪಿ ವಿರುದ್ಧ ನ್ಯಾಯಾಲಯವು ಬಂಧನ ವಾರಂಟ್ ಹಾಗೂ ಉದ್ಘೋಷಣೆ ಹೊರಡಿಸಿತ್ತು. ಅಲ್ಲದೇ 2024ರಲ್ಲೂ ಈತನ ವಿರುದ್ಧ ಕುಂಬಳಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನಕ್ಕೆ ತೆರಳಿದ್ದ ವೇಳೆ ತಲೆಮರೆಸಿಕೊಂಡು ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260821-4-1352183628