
ಬಿಡದಿ ಟೌನ್ಶಿಪ್ ವಿರುದ್ಧ ಜೆಡಿಎಸ್ ರಣಕಹಳೆ: ಪಾದಯಾತ್ರೆಗೆ ಕುಮಾರಸ್ವಾಮಿ ಚಾಲನೆ
ರಾಮನಗರ: ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರೋಧಿಸಿ ಜೆಡಿಎಸ್ ವತಿಯಿಂದ ಬೈರಮಂಗಲದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಮೂರು ದಿನಗಳ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಮಧ್ಯಾಹ್ನ ಬೈರಮಂಗಲದಲ್ಲಿ ಚಾಲನೆ ನೀಡಿದರು.
ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಪಕ್ಷದ ಸಾವಿರಾರು ಕಾರ್ಯಕರ್ತರ ಘೋಷಣೆಗಳ ನಡುವೆ ಪಾದಯಾತ್ರೆ ಶುರುವಾಯಿತು. ಮಾರ್ಗದುದ್ದಕ್ಕೂ ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಗಳು ಮೊಳಗಿದವು. ಪ್ರತಿಭಟನಾ ಫಲಕಗಳು, ಫ್ಲೆಕ್ಸ್ ಗಳು ಪಾದಯಾತ್ರೆಯುದ್ದಕ್ಕೂ ರಾರಾಜಿಸಿದವು.
ಪಾದಯಾತ್ರೆಗಾಗಿ ವಿವಿಧ ಭಾಗಗಳಿಂದ ಬಸ್ಸು ಸೇರಿದಂತೆ ವಿವಿಧ ವಾಹನಗಳಲ್ಲಿ ಪಕ್ಷದ ಕಾರ್ಯಕರ್ತರು ಬಂದಿದ್ದರಿಂದ, ಬಿಡದಿ ಕೈಗಾರಿಕಾ ಪ್ರದೇಶದಿಂದಲೇ ವಾಹನಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು. ಬೆಳಿಗ್ಗೆಯಿಂದಲೇ ಬಿಡದಿ- ಹಾರೋಹಳ್ಳಿ ರಸ್ತೆಯಲ್ಲಿ ಸಂಚಾರ ಬಂದ್ ಆಗಿತ್ತು.
ಎಚ್.ಡಿ. ಕುಮಾರಸ್ವಾಮಿ, ಬಿಜೆಪಿಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಗಡಿ ಮಾಜಿ ಶಾಸಕ ಎ. ಮಂಜುನಾಥ್ ಮಾತನಾಡಿದರು. ಜೆಡಿಎಸ್ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಲ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.
ಬೆಳಿಗ್ಗೆ 10.30ಕ್ಕೆ ಶುರುವಾಗಬೇಕಿದ್ದ ಪಾದಯಾತ್ರೆ ಮಧ್ಯಾಹ್ನ 1.30ಕ್ಕೆ ಆರಂಭಗೊಂಡಿತು.