
ಹೈಕಮಾಂಡ್ ಸೂಚಿಸಿದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಬಾಲಕೃಷ್ಣ
ಮಾಗಡಿ: ‘ಹೈಕಮಾಂಡ್ ಸೂಚಿಸಿದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧನಿದ್ದೇನೆ. ಆದರೆ, ಕೆಲ ಮಾಧ್ಯಮಗಳು ಪ್ರಸಾರ ಮಾಡುತ್ತಿರುವಂತೆ ಸಚಿವ ಸ್ಥಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ’ ಎಂದು ಸಚಿವ ಎಚ್.ಸಿ.ಬಾಲಕೃಷ್ಣ ಹೇಳಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ‘ಪಕ್ಷ ಉಳಿದರೆ ಮಾತ್ರ ಅಧಿಕಾರ ಸಿಗುತ್ತದೆ. ಪಕ್ಷದ ತತ್ವ, ಸಿದ್ಧಾಂತದಡಿ ನಾವು ಕೆಲಸ ಮಾಡುತ್ತಿದ್ದೇವೆ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡವರ ಮನವೊಲಿಸುವ ಕೆಲಸವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಮಾಡುತ್ತಿದ್ದಾರೆ’ ಎಂದರು.
‘ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಸಿ.ಎಂ ಹಾಗೂ ಡಿ.ಕೆ.ಸುರೇಶ್ ಅವರು ನನ್ನ ಕುಟುಂಬದ ಮೇಲಿಟ್ಟಿರುವ ಪ್ರೀತಿ ಯಿಂದಾಗಿ ಸಚಿವ ಸ್ಥಾನ ದೊರೆತಿದೆ. ಅವರು ನನ್ನ ಮೇಲಿಟ್ಟಿರುವ ಪ್ರೀತಿ– ವಿಶ್ವಾಸ ಉಳಿಸಿಕೊಂಡು, ಉತ್ತಮ ಕೆಲಸಗಳನ್ನು ಮಾಡಿ ಮತದಾರರ ಋಣ ತೀರಿಸುವೆ’ ಎಂದು ಹೇಳಿದರು.