
ನವಲಗುಂದ ಬಸ್ ನಿಲ್ದಾಣದಲ್ಲಿ ಕಳ್ಳರ ಕಾಟ: ಮೊಬೈಲ್, ಬೆಲೆ ಬಾಳುವ ವಸ್ತು ಕಳವು
ನವಲಗುಂದ: ಪಟ್ಟಣದಲ್ಲಿನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಸುರಕ್ಷತೆ ಇಲ್ಲದಂತಾಗಿದೆ. ನಿಲ್ದಾಣಕ್ಕೆ ಬರುವ ಮಹಿಳೆಯರ ಹಾಗೂ ವೃದ್ಧರ ಚಿನ್ನಾಭರಣ, ಮೊಬೈಲ್ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಹಗಲಿನಲ್ಲಿಯೇ ಕಳ್ಳರು ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ.
ಹಣ, ಬಂಗಾರ ಹಾಗೂ ಮೊಬೈಲ್ ಕಳೆದುಕೊಂಡ ಪ್ರಯಾಣಿಕರು ಕಣ್ಣೀರು ಹಾಕುತ್ತಾ ಮನೆಗೆ ಹೋಗುವಂತಾಗಿದೆ. ಬಸ್ ನಿಲ್ದಾಣಕ್ಕೆ ಬರುವವರಿಗೆ ಸುರಕ್ಷತೆ ನೀಡುವುದು ಸಾರಿಗೆ ಅಧಿಕಾರಿಗಳು, ಪೊಲೀಸ್ ಇಲಾಖೆ ಕರ್ತವ್ಯವಾಗಿದೆ.
ಕಳ್ಳತನ, ಅಕ್ರಮ ಚಟುವಟಿಕೆ ತಡೆಯಲು ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ನಿಲ್ದಾಣದ ತುಂಬೆಲ್ಲ ಹೈಟೆಕ್ ಮಾದರಿಯ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಆದರೆ, ಅವು ಹಾಳಾಗಿವೆ. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಬಸ್ ನಿಲ್ದಾಣದಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡುವಂತೆ ಇಲ್ಲಿನ ಜನರ ಹಲವು ದಿನಗಳ ಬೇಡಿಕೆಯಿದೆ. ಹಬ್ಬ ಹಾಗೂ ಜನದಟ್ಟಣೆ ಇದ್ದಾಗ ಮಾತ್ರ ಪೊಲೀಸರನ್ನು ನಿಯೋಜಿಸುತ್ತಾರೆ. ಉಳಿದ ದಿನಗಳಲ್ಲಿ ಅಪರೂಪಕ್ಕೊಮ್ಮೆ ಪೊಲೀಸರು ಬಸ್ ನಿಲ್ದಾಣಕ್ಕೆ ಬರುತ್ತಾರೆ ಎಂದು ಕೆಎಸ್ಆರ್ಟಿಸಿ ನಿಲ್ದಾಣದ ಅಧಿಕಾರಿಗಳು ದೂರುತ್ತಾರೆ.
ಕಿಡಿಗೇಡಿಗಳ ಕಾಟ: ಕಾಲೇಜು ವಿದ್ಯಾರ್ಥಿನಿಯರಿಗೆ ಇಲ್ಲಿ ಯಾವುದೇ ಭದ್ರತೆ ಇಲ್ಲದೆ ಇರುವುದರಿಂದ ಕಿಡಿಗೇಡಿಗಳು ವಿದ್ಯಾರ್ಥಿನಿಯರನ್ನು ಚುಡಾಯಿಸುವುದು, ರೇಗಿಸುವುದು ಇಲ್ಲಿ ನಿತ್ಯ ನಡೆಯುತ್ತಲೇ ಇದೆ.
‘ಕೆಎಸ್ಆರ್ಟಿಸಿ ಹೈಟೆಕ್ ಬಸ್ ನಿಲ್ದಾಣದಲ್ಲಿ ಸುರಕ್ಷತೆ ಮರೀಚಿಕೆಯಾಗಿದೆ. ಇನ್ನು ಮುಂದೆಯಾದರೂ ಸಂಬಂಧಪಟ್ಟವರು ಇದರ ಬಗ್ಗೆ ಗಮನ ಹರಿಸಿ ಪ್ರಯಾಣಿಕರಿಗೆ ಸುರಕ್ಷತೆ ನೀಡಬೇಕು’ ಎಂದು ಸಾರ್ವಜನಿಕರು ಆಗ್ರಹಿಸುತ್ತಾರೆ.
‘ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಕ್ರಮ’
‘ಪ್ರಯಾಣಿಕರಿಗೆ ಎಚ್ಚರಿಕೆಯಿಂದ ಇರುವಂತೆ ನಿಲ್ದಾಣದ ನಿಯಂತ್ರಕರು ಮೈಕ್ ಮೂಲಕ ಎಚ್ಚರಿಸಬೇಕು. ಅನುಮಾನಾಸ್ಪದ ವ್ಯಕ್ತಿಗಳು ಕಂಡಲ್ಲಿ ಕೂಡಲೇ ಠಾಣೆಗೆ ಮಾಹಿತಿ ತಿಳಿಸಬೇಕು. ನಿಲ್ದಾಣ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಪಿಎಸ್ಐ ಜನಾರ್ದನ ಬಿ. ‘ಪ್ರಜಾವಾಣಿ’ ಪ್ರತಿನಿಧಿಗೆ ಪ್ರತಿಕ್ರಿಯಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260825-24-1115002247