
ರಾಮನಗರ: ಇಡೀ ಭೂ ಸ್ವಾಧೀನ ಪ್ರಕ್ರಿಯೆಗಿಲ್ಲ ತಡೆ
ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿಯ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಡೀ ಭೂ ಸ್ವಾಧೀನ ಪ್ರಕ್ರಿಯೆಗೆ ತಡೆಯಾಜ್ಞೆ ಕೊಟ್ಟಿಲ್ಲ. ಬದಲಿಗೆ ರಿಟ್ ಅರ್ಜಿದಾರರ ಜಮೀನುಗಳಿಗೆ ಮಾತ್ರ ಆದೇಶ ನೀಡಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.
ಈ ಕುರಿತು ಮಂಗಳವಾರ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಕೆಲ ಭೂ ಮಾಲೀಕರು ಭೂ ಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಸಿದ್ದ ರಿಟ್ ಅರ್ಜಿಗಳು ಮಂಗಳವಾರ ವಿಚಾರಣೆಗೆ ಬಂದಿದ್ದವು. ಈ ವೇಳೆ, ಅರ್ಜಿಗಳು ಇತ್ಯರ್ಥವಾಗುವವರೆಗೆ ಅರ್ಜಿದಾರರ ಜಮೀನು ಸ್ವಾಧೀನಪಡಿಸಿಕೊಳ್ಳದಂತೆ ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ಅರ್ಜಿದಾರರ ಪರ ವಕೀಲರು ಕೋರಿದರು. ಆಗ ಪ್ರಾಧಿಕಾರ ಹಾಗೂ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಅವರು, ಟೌನ್ಶಿಪ್ಗೆ ಸಂಬಂಧಿಸಿದಂತೆ ಕೈಗೊಳ್ಳಲಾಗುತ್ತಿರುವ ಹಾಗೂ ಕೈಗೊಳ್ಳಲಿರುವ ಕ್ರಮಗಳ ಕುರಿತು ಕೋರ್ಟ್ಗೆ ವಿವರಿಸಿದರು.
ಪ್ರಾಧಿಕಾರವು ಕೋರ್ಟ್ಗೆ ಸಲ್ಲಿಸಿರುವಂತೆ, ರಿಟ್ ಅರ್ಜಿಗಳನ್ನು ಸಲ್ಲಿಸಿರುವ ಭೂ ಮಾಲೀಕರಿಗೆ ಸಂಬಂಧಿಸಿದ ಜಮೀನುಗಳ ಕುರಿತು ಮಾತ್ರ ಅನ್ವಯಿಸುವ ಕಾನೂನಿನಂತೆ ಭೂಮಿ, ಮರಗಳು ಹಾಗೂ ಇತರೆ ಆಸ್ತಿಗಳಿಗೆ ಸಂಬಂಧಿಸಿದ ಪರಿಹಾರವನ್ನು ಒಳಗೊಂಡಂತೆ ಪರಿಹಾರ ಘೋಷಣೆಯನ್ನು ಸಿದ್ಧಪಡಿಸಿ ಕೋರ್ಟ್ ಮುಂದೆ ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ನಂತರದ ಭೂ ಸ್ವಾಧೀನ ಕ್ರಮಗಳನ್ನು ಕುರಿತು ಕೋರ್ಟ್ ನಿರ್ದೇಶನಕ್ಕೆ ಅನುಗುಣವಾಗಿ ಕೈಗೊಳ್ಳಲಾಗುವುದು.
ಮುಂದುವರಿದು, ಸಂಬಂಧಪಟ್ಟ ರಿಟ್ ಅರ್ಜಿಗಳಿಗೆ ಸಂಬಂಧಿಸಿದ ಪ್ರತಿ ಹೇಳಿಕೆಗಳು ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಕೋರ್ಟ್ ಸೂಚಿಸಿದೆ. ಅದರಂತೆ ಪ್ರಾಧಿಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಉಳಿದಂತೆ, ಭೂಸ್ವಾಧೀನ ಪ್ರಕ್ರಿಯೆಗಳು ಕಾನೂನುಬದ್ಧವಾಗಿ ಎಂದಿನಂತೆ ಮುಂದುವರಿಯುತ್ತವೆ. ಆದ್ದರಿಂದ, ಇಡೀ ಯೋಜನೆಯ ಭೂ ಸ್ವಾಧೀನ ಪ್ರಕ್ರಿಯೆಗೆ ಕೋರ್ಟ್ ಯಾವುದೇ ಸಾಮಾನ್ಯ ತಡೆಯಾಜ್ಞೆ ನೀಡಿಲ್ಲ. ರಿಟ್ ಅರ್ಜಿದಾರರ ಜಮೀನುಗಳಿಗೆ ಸಂಬಂಧಿಸಿದಂತೆ ಮಾತ್ರ ಕೋರ್ಟ್ ಆದೇಶದ ವ್ಯಾಪ್ತಿಯೊಳಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪ್ರಾಧಿಕಾರದ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260826-14-1887374329