
Govt Job: ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ವಿಭಾಗದ ಖಾಲಿ ಇರುವ ಹುದ್ದೆಗಳ ಭರ್ತಿ
Govt Job: ಕರ್ನಾಟಕದಲ್ಲಿ ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ಸರ್ಕಾರವು ಮುಂದಾಗಿದೆ. ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಬೃಹತ್ ನೇಮಕಾತಿ ಪರ್ವ ಆರಂಭವಾಗಿದೆ. ಇದರಲ್ಲಿ 3991 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಈ ಪೈಕಿ ಉಳಿಕೆ ಮೂಲ ವೃಂದದಲ್ಲಿ 3395 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 596 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಬೆಳಿಗ್ಗೆ 10 ರಿಂದ 11.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಇಲ್ಲಿ ಒಟ್ಟು 884 ಪರೀಕ್ಷಾ ಕೇಂದ್ರಗಳಿವೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಯನ್ನು ಮಧ್ಯಾಹ್ನ 2.30ರ ಬದಲು ಸಂಜೆ 4 ಗಂಟೆಯಿಂದ 5.30ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 186 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಆಗಸ್ಟ್ 2ರಂದು ನಡೆಯಲಿರುವ ಸಿವಿಲ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭವಾಗಲಿ. ನಿಮ್ಮ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸಿದ್ಧತೆಗೆ ತಕ್ಕ ಯಶಸ್ಸು ದೊರೆಯಲಿ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿ, ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿ ಎಂದು ಆಶಿಸುತ್ತೇನೆ.
ವಿಶೇಷ ಸೂಚನೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ
ಈ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ವಿಶ್ವಾಸಾರ್ಹವಾಗಿ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಅಗತ್ಯವಿರುವ ಎಲ್ಲ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ವಂಚನೆಗೆ ಅವಕಾಶವಿಲ್ಲ. ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಅಂತಹ ಅಭ್ಯರ್ಥಿಗಳಿಗೆ ಮುಂದೆ ಯಾವುದೇ ಸರ್ಕಾರಿ ನೇಮಕಾತಿಗಳಲ್ಲಿ ಭಾಗವಹಿಸಲು ಅವಕಾಶ ನೀಡದಂತೆ ಶಾಶ್ವತವಾಗಿ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ. ಪ್ರಾಮಾಣಿಕವಾಗಿ ಸಿದ್ಧತೆ ನಡೆಸಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ನ್ಯಾಯ ಒದಗಿಸುವುದು ನಮ್ಮ ಬದ್ಧತೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ಅಭ್ಯರ್ಥಿಗಳಿಗೂ ಶುಭವಾಗಲಿ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಶಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.
ಇನ್ನು ಈ ಪರೀಕ್ಷಾ ದಿನಾಂಕದ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ರೋಶ ಹೊರಹಾಕಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಉಳಿಕೆ ಮೂಲ ವೃಂದದ 3,395 ಮತ್ತು ಸ್ಥಳೀಯ ವೃಂದದ 596 ಪೊಲೀಸ್ ಕಾನ್ಸ್ಟೇಬಲ್ (sivil) ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಒಂದೇ ದಿನ ನಡೆಸುತ್ತಿರುವುದು ಎರಡೂ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಪ್ರಾಧಿಕಾರಕ್ಕೆ ಕಿಂಚಿತ್ತಾದರೂ ಸಾಮಾನ್ಯ ಜ್ಞಾನವಿದ್ದರೆ ಈ ರೀತಿಯಾದ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಅವೈಜ್ಞಾನಿಕ ಪರೀಕ್ಷೆ ವೇಳಾಪಟ್ಟಿಯಿಂದ (Unscientific Examination Scheduling) ಪರೀಕ್ಷಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಹೇಳಿದ್ದಾರೆ.