IAS Transfer: ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ, ಕೆಪಿಎಸ್ಸಿಗೆ ಇಬ್ಬರ ನೇಮಕ
ಬೆಂಗಳೂರು: ಕರ್ನಾಟಕ ಸರ್ಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಬ್ಬರನ್ನು ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿ ಹೆಚ್ಚುವರಿ ಕಾರ್ಯಭಾರ ವಹಿಸಲಾಗಿದೆ.
ಕೆಪಿಎಸ್ಸಿಯ ಪರೀಕ್ಷಾ ನಿಯಂತ್ರಕ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರನ್ನು ವರ್ಗ ಮಾಡಲಾಗಿದ್ದು, ಅವರಿಗೆ ಯಾವುದೇ ಹುದ್ದೆ ನೀಡಿಲ್ಲ.
ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಲವಿಶ್ ಓರ್ಡಿಯಾ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಜಂಟಿ ಪರೀಕ್ಷಾ ನಿಯಂತ್ರಕ ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹುದ್ದೆ ಕೆಲ ದಿನಗಳಿಂದ ಖಾಲಿ ಇತ್ತು. ಯಾದಗಿರಿ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಗೆ ಯಾರನ್ನು ನೇಮಿಸಿಲ್ಲ.