
ಇಂದಿರಾ ಆವಾಸ್ ಅಕ್ರಮ: 3 ವರ್ಷ ಜೈಲು, ₹2 ಲಕ್ಷ ದಂಡ
ಗಂಗಾವತಿ: ಇಂದಿರಾ ಆವಾಸ್ ಯೋಜನೆಯಡಿ ಫಲಾನುಭವಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಮನೆ ನಿರ್ಮಿಸದೆ ಸರ್ಕಾರದ ಹಣ ದುರ್ಬಳಕೆ ಮಾಡಿರುವ ಪ್ರಕರಣದಲ್ಲಿ ಆರೋಪಿ ಯಂಕೋಬ ಅಂಗಡಿ ಎನ್ನುವರಿಗೆ ಗಂಗಾವತಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯವು 3 ವರ್ಷ ಜೈಲು ಶಿಕ್ಷೆ, ₹2 ಲಕ್ಷ ದಂಡ ವಿಧಿಸಿ ಆದೇಶಿಸಿದೆ.
ತಾಲ್ಲೂಕಿನ ಮಲ್ಲಾಪುರ ಗ್ರಾಪಂ ವ್ಯಾಪ್ತಿಯಲ್ಲಿ 2008-09 ಮತ್ತು 2009-10ನೇ ಸಾಲಿನಲ್ಲಿ ಇಂದಿರಾ ಆವಾಸ್ ಯೋಜನೆ ಫಲಾನುಭವಿಗಳಾಗಿ ಆಯ್ಕೆಯಾಗಿದ್ದ ಅಂಜಿನಮ್ಮ, ಲಕ್ಷ್ಮೀ, ರೇಣುಕಮ್ಮ ಹಾಗೂ ಗಂಗಮ್ಮ ಅವರ ಹೆಸರು ದುರ್ಬಳಕೆ ಮಾಡಿಕೊಳ್ಳಲಾಗಿತ್ತು.
ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿ ಗಂಗಾವತಿಯ ಆಕ್ಸಿಸ್ ಬ್ಯಾಂಕ್ ಹಾಗೂ ಮಲ್ಲಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಖಾತೆಗಳನ್ನು ತೆರೆದಿದ್ದರು.
ಮನೆ ನಿರ್ಮಾಣ ಮಾಡದೇ, ಸರ್ಕಾರದಿಂದ ಮಂಜೂರಾದ ₹1.35 ಲಕ್ಷ ಮೊತ್ತವನ್ನು ವಿವಿಧ ಹಂತಗಳಲ್ಲಿ ಗ್ರಾಮ ಪಂಚಾಯಿತಿಯಿಂದ ಚೆಕ್ ಮೂಲಕ ಪಡೆದು, ಬ್ಯಾಂಕ್ಗಳಿಂದ ನಗದೀಕರಿಸಿಕೊಂಡು ಸ್ವಂತಕ್ಕೆ ಬಳಸಿಕೊಂಡಿದ್ದರು. ಈ ಕುರಿತು 2014ರಲ್ಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖಾಧಿಕಾರಿ ಬಿ.ಅಮರೇಶ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬಿತಾಗಿದ್ದರಿಂದ ನ್ಯಾಯಾಲಯ ಸೆ.5ರಂದು ವೆಂಕೋಬ ಅಂಗಡಿ ಅವರಿಗೆ ಶಿಕ್ಷೆ ವಿಧಿಸಿದೆ.
ಸರ್ಕಾರದ ಪರ ಸಹಾಯಕ ಸರ್ಕಾರಿ ಅಭಿಯೋಜಕ ನಿರಂಜನಸ್ವಾಮಿ, ದೇವಯ್ಯಸ್ವಾಮಿ ಹಿರೇಮಠ ವಾದ ಮಂಡಿಸಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260906-35-1684268092