
ಶಿಡ್ಲಘಟ್ಟದ 7 ಕೆರೆಗಳಿಗೆ ಎಚ್.ಎನ್. ವ್ಯಾಲಿ ನೀರು ಹರಿಸಲು ರೈತ ಸಂಘ ಒತ್ತಾಯ
ಶಿಡ್ಲಘಟ್ಟ: ತಾಲ್ಲೂಕಿನ ಉಳಿದ ಏಳು ಕೆರೆಗಳಿಗೆ ಎಚ್.ಎನ್. ವ್ಯಾಲಿ ಯೋಜನೆಯ ನೀರನ್ನು ತಕ್ಷಣವೇ ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ (ಕೆ.ಎಸ್. ಪುಟ್ಟಣ್ಣಯ್ಯ ಬಣ)ದ ಮುಖಂಡರು ಒತ್ತಾಯಿಸಿದರು.
ಈ ಸಂಬಂಧ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಟಿ. ಲಕ್ಷ್ಮಿನಾರಾಯಣ ರೆಡ್ಡಿ, ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ಎಸ್.ಎಂ. ರವಿಪ್ರಕಾಶ್, ಜಿಲ್ಲಾ ಗೌರವಾಧ್ಯಕ್ಷ ಕೋಟೆ ಚನ್ನೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಾಂಜಿ ಸೇರಿ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿ ಜಿ. ಪ್ರಭು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
‘ಎಚ್.ಎನ್. ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ ಶಿಡ್ಲಘಟ್ಟ ತಾಲ್ಲೂಕಿನ 9 ಕೆರೆಗಳಿಗೆ ನೀರು ಹರಿಸಬೇಕಿತ್ತು. ಆದರೆ, ಎರಡು ಕೆರೆಗಳಿಗೆ ಮಾತ್ರ ನಾಮಕಾವಸ್ಥೆಯಂತೆ ನೀರು ಹರಿಸಲಾಗಿದೆ. ಉಳಿದ ಏಳು ಕೆರೆಗಳಿಗೆ ಇದುವರೆಗೆ ನೀರು ಹರಿಸಿಲ್ಲ. ಇದೀಗ ನಾಲ್ಕು ದಿನಗಳಿಂದ ಬರುತ್ತಿದ್ದ ನೀರನ್ನೂ ಸ್ಥಗಿತಗೊಳಿಸಲಾಗಿದೆ’ ಎಂದು ಮುಖಂಡರು ದೂರಿದರು.
ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗಿದೆ. ಆದ್ದರಿಂದ ಉಳಿದ ಏಳು ಕೆರೆಗಳಿಗೆ, ವಿಶೇಷವಾಗಿ ಬಂಡೆಮ್ಮ ಕೆರೆ ಮತ್ತು ಅಮ್ಮನ ಕೆರೆಗೆ ಕೂಡಲೇ ನೀರು ಹರಿಸಬೇಕು ಎಂದು ಆಗ್ರಹಿಸಿದರು.
ಹಿಂದೆ ಇದೇ ಬೇಡಿಕೆಗೆ ಆಗ್ರಹಿಸಿ ಶಿಡ್ಲಘಟ್ಟದಿಂದ ಚಿಕ್ಕಬಳ್ಳಾಪುರಕ್ಕೆ ಬೃಹತ್ ಬೈಕ್ ರ್ಯಾಲಿ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿತ್ತು. ಇದೀಗ ಮತ್ತೊಮ್ಮೆ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿ ವಿಷ್ಣು ಕಾಮತ್ ಅವರಿಗೆ ಮನವಿ ಸಲ್ಲಿಸಿ, ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಒತ್ತಾಯಿಸಲಾಗಿದೆ.
ಈ ವೇಳೆ ಕ್ರೀಡಾಪಟು ನಾರಾಯಣಸ್ವಾಮಿ, ಬಶೆಟ್ಟಹಳ್ಳಿ ಹೋಬಳಿ ಅಧ್ಯಕ್ಷ ದ್ಯಾವಪ್ಪ, ಶಂಕರ್, ನಾರಾಯಣ, ನಾಗೇಶ್, ನಾಗರಾಜ್, ನಾರಾಯಣಸ್ವಾಮಿ ಸೇರಿದಂತೆ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.