
ಧಾರವಾಡ ತಾಲ್ಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಗೆ ಒತ್ತಾಯ
ಧಾರವಾಡ: ‘ಮಳೆ ಕೊರತೆಯಿಂದ ತಾಲ್ಲೂಕಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಧಾರವಾಡ ತಾಲ್ಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಬೇಕು. ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು’ ಎಂದು ಮಾಜಿ ಶಾಸಕ ಅಮೃತ ದೇಸಾಯಿ ಒತ್ತಾಯಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಳೆ ಕೈಕೊಟ್ಟಿದ್ದರಿಂದ ಬೆಳೆಗಳು ಒಣಗಿದವು. ಬಿತ್ತನೆಗೆ ಮಾಡಿದ ಖರ್ಚೂ ಕೈಗೆ ಸಿಗದಂತಾಗಿದೆ’ ಎಂದರು.
‘ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ ಅವರು ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ರಾಜಕೀಯ ಮುಖಂಡರನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದರು.
‘ತಾಂತ್ರಿಕ ಕಾರಣ ನೀಡಿ ವೃದ್ಧಾಪ್ಯ, ಅಂಗವಿಕಲ, ವಿಧವಾ ಪಿಂಚಣಿ ಸ್ಥಗಿತಗೊಳಿಸಿರುವುದರಿಂದ ಫಲಾನುಭವಿಗಳಿಗೆ ತೊಂದರೆಯಾಗಿದೆ. ಸರ್ಕಾರ ಪಿಂಚಣಿ ಬಿಡುಗಡೆಗೊಳಿಸಬೇಕು. ಹೊಸವಾಳ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರು ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆಯಿಂದಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಿ ಪರಿಹಾರ ನೀಡಬೇಕು. ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದರು. ಮಾಜಿ ಶಾಸಕಿ ಸೀಮಾ ಮಸೂತಿ, ಶಂಕರ ಶೇಳಕೆ, ಶಂಕರಕುಮಾರ ದೇಸಾಯಿ, ಮಹದೇವಪ್ಪ ದಂಡಿನ, ಸಿದ್ದನಗೌಡ ಪಾಟೀಲ ಸುದ್ದಿಗೋಷ್ಠಿಯಲ್ಲಿದ್ದರು.