
ಭದ್ರಾ ಮೇಲ್ದಂಡೆ ಯೋಜನೆ ಕಾರ್ಯಾರಂಭ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಗಣ್ಯರು
ಶಿವಮೊಗ್ಗ: ಬಯಲು ನಾಡಿನ ನಾಲ್ಕು ಜಿಲ್ಲೆಗಳ, ಬರಪೀಡಿತ 12 ತಾಲ್ಲೂಕುಗಳಿಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಇಲ್ಲಿನ ಲಕ್ಕವಳ್ಳಿ ಬಳಿಯ ಭದ್ರಾ ಯೋಜನಾ ಪ್ರದೇಶದ (ಬಿಆರ್ಪಿ) ಶಾಂತಿಪುರದ ಬಳಿ ಭಾನುವಾರ ಮುಂಜಾನೆ ವಿದ್ಯುಕ್ತ ಚಾಲನೆ ನೀಡಲಾಯಿತು.
ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಯ ಮೂಲಕ ಅಲ್ಲಿನ ಗೋನೂರು ಕೆರೆಗೆ ಪ್ರಾಯೋಗಿಕವಾಗಿ 3 ಟಿಎಂಸಿ ಅಡಿ ನೀರು ಹರಿಸುವ ಕಾರ್ಯಕ್ಕೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿಯೂ ಆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ.ರಘುಮೂರ್ತಿ ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.
ಈ ಐತಿಹಾಸಿಕ ಕ್ಷಣಕ್ಕೆ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ, ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಬಂದಿದ್ದ ರೈತ ಸಂಘಟನೆಗಳ ಮುಖಂಡರು, ನೀರಾವರಿ ಹೋರಾಟ ಸಮಿತಿ ಸದಸ್ಯರು ಸಾಕ್ಷಿಯಾದರು. ಭದ್ರೆ ಬಯಲು ಹಾದಿಯ ಹಿಡಿದದ್ದು ಕಂಡು ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಸಚಿವ ಟಿ.ರಘುಮೂರ್ತಿ, ಭದ್ರಾ ಮೇಲ್ದಂಡೆ ಯೋಜನೆ ತೇರು ಮುನ್ನಡೆಯಲು ಸತತ ಆರು ದಶಕಗಳಿಂದ ಹೋರಾಟ ನಡೆಸಿದ ಎಲ್ಲ ಮಹನೀಯರಿಗೂ ಕೃತಜ್ಞತೆ ಅರ್ಪಿಸುವೆ ಎಂದು ಭಾವುಕರಾಗಿ ಹೇಳಿದರು. 2002ರಲ್ಲಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ₹2214 ಕೋಟಿ ಹಣ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಿದ್ದನ್ನು ಸ್ಮರಿಸಿದ ಅವರು, ನಂತರ ಬಂದ ಎಲ್ಲ ಮುಖ್ಯಮಂತ್ರಿಗಳೂ ಯೋಜನೆ ಜಾರಿಗೆ ನೆರವಾಗಿದ್ದಾರೆ. ಈಗ ಬರದ ವಾತಾವರಣದಲ್ಲೂ ಪ್ರಾಯೋಗಿಕವಾಗಿ ಮೂರು ಟಿಎಂಸಿ ಅಡಿ ನೀರು ಹರಿಸಲು ಅವಕಾಶ ಮಾಡಿಕೊಡುವ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಯಲು ನಾಡಿನ ಜನರ ಪರ ಕಾಳಜಿ ಮೆರೆದಿದ್ದಾರೆ ಎಂದರು.
ಭದ್ರಾ ಜಲಾಶಯದಿಂದ 12.9 ಟಿಎಂಸಿ ಅಡಿ ಹಾಗೂ ತುಂಗಾ ಜಲಾಶಯದಿಂದ 17 ಟಿಎಂಸಿ ಅಡಿ ಸೇರಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ 29.9 ಟಿಎಂಸಿ ಅಡಿ ನೀರು ಹಂಚಿಕೆ ಆಗಿದ್ದು, ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು, ದಾವಣಗೆರೆ ಜಿಲ್ಲೆಯ ಜಗಳೂರು, ತುಮಕೂರು ಜಿಲ್ಲೆಯ ಶಿರಾ, ಚಿಕ್ಕನಾಯಕನಹಳ್ಳಿ, ಪಾವಗಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಹಾಗೂ ಕಡೂರು ತಾಲ್ಲೂಕುಗಳ ವ್ಯಾಪ್ತಿಯ 367 ಕೆರೆ ತುಂಬಿಸುವ ಹಾಗೂ 2.25 ಲಕ್ಷ ಹೆಕ್ಟೇರ್ ಹನಿ ನೀರಾವರಿ ಯೋಜನೆಗೆ ಅವಕಾಶ ಕಲ್ಪಿಸಲಾಗಿದೆ. ವಿಶ್ವೇಶ್ವರಯ್ಯ ಜಲನಿಗಮದಿಂದ (ವಿಜೆಎನ್ಎಲ್) ಕಾಮಗಾರಿ ಕೈಗೊಳ್ಳಲಾಗಿದೆ.