
ಕೋಲಾರ| ಬೆಲ್ರೈಸ್ ಕಂಪನಿ ಕಾರ್ಮಿಕರ ವಜಾ, ಸಿಐಟಿಯು ಆಕ್ರೋಶ
ಕೋಲಾರ: ‘ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಬೆಲ್ರೈಸ್ ಕಂಪನಿಯಲ್ಲಿ ದುಡಿಯುತ್ತಿರುವ 14 ಕಾರ್ಮಿಕರನ್ನು ಅಕ್ರಮವಾಗಿ ವರ್ಗಾವಣೆ ಹಾಗೂ ವಜಾ ಮಾಡಲಾಗಿದೆ. ಜಿಲ್ಲಾಡಳಿತವು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು’ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಒತ್ತಾಯಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕಂಪನಿಯಲ್ಲಿ ಸುಮಾರು 150 ಕಾಯಂ ಹಾಗೂ 1,050 ಗುತ್ತಿಗೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಮಿಕರು ಸಂಘ ರಚಿಸಲು ಕಾರ್ಮಿಕ ಇಲಾಖೆಗೆ ಅರ್ಜಿ ಸಲ್ಲಿಸಿದ್ದು, ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಈ ಹಂತದಲ್ಲಿ ಆಡಳಿತ ಮಂಡಳಿಯು ಕಾರ್ಮಿಕರಿಗೆ ಕಿರುಕುಳ, ಬೆದರಿಕೆ ಹಾಗೂ ದೌರ್ಜನ್ಯ ನಡೆಸುತ್ತಿದೆ’ ಎಂದು ಆರೋಪಿಸಿದರು.
ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ‘ಯೂನಿಯನ್ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಏಳು ಮಂದಿಯನ್ನು ಪುಣೆ, ಔರಂಗಾಬಾದ್, ರಾಜಸ್ಥಾನ ಸೇರಿದಂತೆ ವಿವಿಧ ಘಟಕಗಳಿಗೆ ವರ್ಗಾಯಿಸಲಾಗಿದೆ. ಕೆಲವರಿಗೆ ವಜಾ ನೋಟಿಸ್ ನೀಡಲಾಗಿದೆ. ಈ ಕ್ರಮಗಳನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ’ ಎಂದರು.
ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎಂ.ಭೀಮರಾಜ್, ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಮಂಜುನಾಥ್, ಉಪಾಧ್ಯಕ್ಷ ದೇವಪ್ಪ, ಖಜಾಂಚಿ ದೂಲಕೇಶ್ವರ್ ಇದ್ದರು.